ಚಾಮರಾಜನಗರ: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧರ್ಮಸಭೆಯಲ್ಲಿ ಭಾಗಿಯಾಗಿದ್ದ ಜಿಲ್ಲೆಯ 12 ಮಂದಿಯಲ್ಲಿ ಕೊಳ್ಳೇಗಾಲ ಮತ್ತು ಚಾಮರಾಜನಗರದ 4 ಮಂದಿಯನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧರ್ಮಸಭೆ ಇದೀಗ ಭಾರಿ ಆತಂಕಕ್ಕೆ ಕಾರಣವಾಗಿದ್ದು, ಜಿಲ್ಲೆಯ 12 ಮಂದಿ ಭಾಗವಹಿಸಿರುವ ಮಾಹಿತಿ ಲಭ್ಯವಾಗಿದೆ. ಒಬ್ಬರು ಸಭೆಯ ಬಳಿಕ ಬೆಂಗಳೂರಿನಲ್ಲೇ ನೆಲೆಸಿದ್ದು, ಅವರನ್ನು ಜಿಲ್ಲಾಡಳಿತದಿಂದ ಸಂಪರ್ಕಿಸಲಾಗಿದೆ. ಉಳಿದ 8 ಮಂದಿಯ ಮೊಬೈಲ್ ಸಂಖ್ಯೆಗಳನ್ನು ಪಡೆದು ಅವರ ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ ಎಂದು ಮಾಹಿತಿ ನೀಡಿದರು.
ಯಳಂದೂರಿನಲ್ಲಿ ನಿರಾಶ್ರಿತರಾಗಿರುವ ಮಹಾರಾಷ್ಟ್ರದ ಕಾರ್ಮಿಕರ ಕುರಿತು ಅಲ್ಲಿನ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಕೊಳ್ಳೇಗಾಲದ ಆಸ್ಪತ್ರೆ, ಇಂದಿರಾ ಕ್ಯಾಂಟೀನ್, ನಾಲ್ ರೋಡ್ ಚೆಕ್ ಪೋಸ್ಟ್, ಯಳಂದೂರು ತಾಲೂಕಿನ ಗೌಡಹಳ್ಳಿಯ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದರು.