ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ 3 ಗಂಟೆ ತಡವಾಗಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು, ಸುಪ್ರೀಂ ಕೋರ್ಟ್ ಒಂದು ವಿಧಾನಸಭಾ ವ್ಯಾಪ್ತಿಯ 5 ಮತಗಟ್ಟೆಯ ವಿವಿಪ್ಯಾಟ್ ಮತ್ತು ಇವಿಎಂಗಳಲ್ಲಿ ಬಿದ್ದ ಮತಗಳನ್ನು ತಾಳೆ ಮಾಡಬೇಕು ಎಂದು ಆದೇಶಿಸಿದೆ. ಹೀಗಾಗಿ ಫಲಿತಾಂಶ ಪ್ರಕಟ ಮೂರು ಗಂಟೆ ತಡವಾಗಬಹುದು ಎಂದು ಅವರು ಹೇಳಿದರು.
ಚುನಾವಣಾ ಆಯೋಗ ಒಂದು ವಿಧಾನಸಭಾ ಕ್ಷೇತ್ರ ಒಂದು ಮತಗಟ್ಟೆಯ ವಿವಿಪ್ಯಾಟ್ ಮತ್ತು ಇವಿಎಂಗಳನ್ನು ತಾಳೆ ಮಾಡಲಾಗುವುದು ಎಂದು ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಇವಿಎಂ ಬಳಕೆಯ ಕುರಿತು ಸುಪ್ರೀಂ ಕೋರ್ಟಿಗೆ ದೇಶದ 21 ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಿದ್ದವು. ಈ ವೇಳೆ ಪ್ರತಿ ಚುನಾವಣಾ ಕ್ಷೇತ್ರದ ಶೇ.50 ರಷ್ಟು ಇವಿಎಂ ಗಳನ್ನು ವಿವಿಪ್ಯಾಟ್ ನೊಂದಿಗೆ ಹೋಲಿಕೆ ಮಾಡಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿತ್ತು. ಈ ಮನವಿ ಆಯೋಗ ಶೇ.50 ರಷ್ಟು ಮತ ಎಣಿಕೆ ನಡೆಸಿದರೆ ಫಲಿತಾಂಶ ಪ್ರಕಟಿಸಲು 5-6 ದಿನ ಬೇಕಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿತ್ತು.
ಇಲ್ಲಿಯವರೆಗೆ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಚಲಾವಣೆಯಾದ ಇವಿಎಂ ಮತಗಳನ್ನು ವಿವಿಪ್ಯಾಟ್ ನಲ್ಲಿ ಬಿದ್ದ ಮತಗಳ ಜೊತೆ ತಾಳೆ ಮಾಡಲಾಗುತಿತ್ತು. ಆದರೆ ಈಗ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯ ಬದಲಾಗಿ 5 ಮತಗಟ್ಟೆಯ ವಿವಿ ಪ್ಯಾಟ್ ಮತ್ತು ಇವಿಎಂ ತಾಳೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ಪ್ರಕಟಿಸಿತ್ತು.