– ವ್ಯಾಪಾರಿಗಳಿಂದ ಸ್ವಯಂಪ್ರೇರಿತವಾಗಿ ಅಂಗಡಿ ಬಂದ್
ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ (ಜು.20) ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ನೆರವೇರಲಿದೆ. ಈ ಹಿನ್ನೆಲೆ ಸೋಮವಾರ (ಜು.20) ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಹೊಳೆನರಸೀಪುರದ ಎಲ್ಲಾ ಅಂಗಡಿಗಳು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಗೌರವ ಸಲ್ಲಿಸಲು ವ್ಯಾಪಾರಸ್ಥರು ನಿರ್ಧರಿಸಿದ್ದಾರೆ.
ಗಣ್ಯ ವ್ಯಕ್ತಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಸಂದಣೆ, ಟ್ರಾಫಿಕ್ ಜಾಮ್ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ, ವಿದ್ಯಾರ್ಥಿಗಳ ಸುರಕ್ಷತೆ, ಸಾರ್ವಜನಿಕ ಶಾಂತಿ ಮತ್ತು ಸುಗಮ ಸಂಚಾರ ದೃಷ್ಟಿಯಿಂದ ಹೊಳೆನರಸೀಪುರ ತಾಲೂಕಿನ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ನಮ್ಮ ಅತ್ತೆ ದೊಡ್ಡ ಶಿವಭಕ್ತೆ – ಭಾವುಕರಾದ ಸೊಸೆ ಭವಾನಿ ರೇವಣ್ಣ
ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ರಾಜಕಾರಣಿಗಳು, ಸಿನಿಮಾ ನಟರು, ಸ್ವಾಮೀಜಿಗಳು, ಸಾರ್ವಜನಿಕರು ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ, ಪತ್ನಿಯ ಮುಖ ನೋಡುತ್ತಾ ದೇವೇಗೌಡರು ಕಣ್ಣೀರು ಹಾಕಿದರು. ಈ ಮಧ್ಯೆ, ದೇವೇಗೌಡರಿಗೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರವಾಣಿ ಕರೆ ಮೂಲಕ ಸಂತಾಪ ಹೇಳಿ, ಧೈರ್ಯ ತುಂಬಿದ್ದಾರೆ.
ಚೆನ್ನಮ್ಮ ಅವರ ಪಾರ್ಥಿವ ಶರೀರ ಬೆಂಗಳೂರಿನಿಂದ ಹರದನಹಳ್ಳಿಗೆ ಕೊಂಡೊಯ್ಯಲಾಗುತ್ತಿದೆ. ಮಧ್ಯರಾತ್ರಿ ವೇಳೆಗೆ ಹರದನಹಳ್ಳಿಗೆ ತಲಪುವ ಸಾಧ್ಯತೆ ಇದೆ. ಇನ್ನೂ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿರುವ ಕ್ಯಾತನಹಳ್ಳಿಗೆ ದೇವೇಗೌಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೆನ್ನಮ್ಮ ಅವರ ಅಂತ್ಯಕ್ರಿಯೆ ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನಡೆಯಲಿದೆ. ಇದನ್ನೂ ಓದಿ: ವಾಸ್ತುಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ – 5 ಎಸ್ಪಿಗಳ ನೇತೃತ್ವದಲ್ಲಿ 2,000ಕ್ಕೂ ಹೆಚ್ಚು ಪೊಲೀಸರ ಭದ್ರತೆ
