ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಅವರು ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.
ಬಹಳ ವರ್ಷದ ನಂತರ ಬಿಜೆಪಿಯವರು ಮೇಯರ್ ಆಗಿದ್ದಾರೆ. ಇದಕ್ಕೆ ಎಲ್ಲ ಪಾಲಿಕೆ ಸದಸ್ಯರಿಗೆ ಹಾಗೂ ಮೈಸೂರಿನ ಜನತೆಗೆ ಧನ್ಯವಾದಗಳು. ಇದಕ್ಕಾಗಿ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಅಶೋಕ್, ಶಾಸಕರಾದ ನಾಗೇಂದ್ರ, ರಾಮದಾಸ್, ಪಕ್ಷದ ಕಾರ್ಯಕರ್ತರು, ಅಧ್ಯಕ್ಷರು ಸೇರಿ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು -ಮೈಸೂರು ಪಾಲಿಕೆಯಲ್ಲಿ ಬಿಜೆಪಿಗೆ ಮೇಯರ್ ಪಟ್ಟ
ದೆಹಲಿ ಪ್ರವಾಸ: ದೆಹಲಿಗೆ ಇಂದು ತೆರಳಿದ ಮುಖ್ಯಮಂತ್ರಿಗಳು ಸಂಜೆ ಕೇಂದ್ರ ಕೃಷಿ ಸಚಿವರು ಹಾಗೂ ಜಲಶಕ್ತಿ ಸಚಿವರನ್ನು ಭೇಟಿಯಾಲಿದ್ದಾರೆ. ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗುತ್ತೇನೆ. ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲು ಸಮಯ ಕೋರಿರುವುದಾಗಿ ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.