ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಗಂಗಮ್ಮ ಗುಡಿ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಒರ್ವ ಮಹಿಳೆಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಎಸ್ಪಿ, ಪ್ರಕರಣದಲ್ಲಿ ಇದುವರೆಗೂ ಮಹಿಳೆಯೊಬ್ಬರು ಮೃತ ಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ 11 ಜನ ಅಸ್ವಸ್ಥರಾಗಿದ್ದಾರೆ. ಸದ್ಯ ಕೋಲಾರದ ಆರ್.ಎಲ್ ಜಾಲಪ್ಪ ಖಾಸಗಿ ಆಸ್ಪತ್ರೆಯಲ್ಲಿ 6 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ಪ್ರಸಾದ ನೀಡುತ್ತಿದ್ದ ಮಹಿಳೆ, ಪಕ್ಕದಲ್ಲಿ ಹೂ ಮಾರುತ್ತಿದ್ದ ಮಹಿಳೆಯರನ್ನ ವಿಚಾರಣೆ ನಡೆಸುತ್ತಿದ್ದೇವೆ. ದೇವಾಲಯದ ಅರ್ಚಕನನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ದೇವಾಲಯದ ಪಕ್ಕದಲ್ಲೇ ಹೂ ಮಾರಾಟ ಮಾಡುತ್ತಿದ್ದ ವೃದ್ಧೆಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ವೇಳೆ ವೃದ್ಧೆ ಅಮರಾವತಿ ಎಂಬ ಮಹಿಳೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಪೊಲೀಸರು ಮಹಿಳೆಯ ಹುಡುಕಾಟ ನಡೆಸಿದ್ದಾರೆ. ಆದರೆ ಪ್ರಕರಣ ಬೆಳಕಿಗೆ ಬರುತ್ತಿದಂತೆ ಮಹಿಳೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಮಹಿಳೆ ಕೆಲಸ ಮಾಡುತ್ತಿದ್ದ ಹೋಟೆಲ್ ಬಳಿ ಪತಿಗೆ ಹುಷಾರಿಲ್ಲ ಎಂದು ಹೇಳಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಪ್ರಸಾದ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಗ್ಯವನ್ನು ಶಾಸಕ ಜೆಕೆ ಕೃಷ್ಣಾರೆಡ್ಡಿ ಭೇಟಿ ನೀಡಿ ವಿಚಾರಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿಗೆ ಮಾಹಿತಿ ನೀಡಿದ ಅವರು, ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಉಳಿದವರ ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಅಸ್ವಸ್ಥರ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದು, ಯಾವುದೇ ತೊಂದರೆ ಇಲ್ಲ. ಒಂದೇ ಕುಟುಂಬವನ್ನು ಗುರಿಯಾಗಿಸಿ ಕೃತ್ಯ ನಡೆಸಿರುವ ಹಾಗೆ ಮೇಲ್ನೋಟಕ್ಕೆ ಕಾಣುತ್ತಿದೆ. ಆದ್ದರಿಂದ ಚಾಮರಾಜನಗರ ಪ್ರಕರಣಕ್ಕೆ ಇದು ಹೋಲಿಕೆ ಆಗುತ್ತಿಲ್ಲ. ವೈಯಕ್ತಿಕ ದ್ವೇಷದ ಮೇಲೆ ನಡೆದಿರುವ ಶಂಕೆ ಇದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
https://www.youtube.com/watch?v=PRlm9tre_DY
https://www.youtube.com/watch?v=5ev4AgezPd4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv