ಚಿಕ್ಕಬಳ್ಳಾಪುರ: ಗ್ರಾಮಪಂಚಾಯತಿ ಕಚೇರಿಯಲ್ಲೇ ದಿನಗೂಲಿ ನೌಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ತಾಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಿರೇಕಟ್ಟಿಗೇನಹಳ್ಳಿ ಗ್ರಾಮ ಪಂಚಾಯತಿಯ ರಾಮಕೃಷ್ಣಪ್ಪ (55) ಆತ್ಮಹತ್ಯೆಗೆ ಶರಣಾದ ದಿನಗೂಲಿ ನೌಕರ. ರಾಮಕೃಷ್ಣಪ್ಪ ಬೀದಿ ದೀಪಗಳ ನಿರ್ವಹಣೆ ಮಾಡುತ್ತಿದ್ದ. ಗ್ರಾಮಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಂದು ಗ್ರಾಮಸಭೆಯಲ್ಲಿ ನಿರತರಾಗಿದ್ದರು. ಹೀಗಾಗಿ ಕಚೇರಿಗೆ ಬಂದಿರುವ ರಾಮಕೃಷ್ಣಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ರಾಮಕೃಷ್ಣಪ್ಪನಿಗೆ ಕಳೆದ ಆರು ತಿಂಗಳ ಹಿಂದೆ ಕೆಲಸ ಕೂಡ ಖಾಯಂ ಆಗಿತ್ತು. ಮದ್ಯದ ದಾಸನಾಗಿದ್ದ ರಾಮಕೃಷ್ಣಪ್ಪ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ. ಮಾನಸಿಕವಾಗಿ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಚಿಂತಾಮಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಚಿಂತಾಮಣಿ ತಾಲೂಕಿನ ಆನೂರು ಗ್ರಾಮದ ಗ್ರಂಥಾಲಯದ ಗ್ರಂಥಪಾಲಕ ರೇವಣ್ಣಕುಮಾರ್ ವಿಧಾನಸೌಧದಲ್ಲಿ ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬೆನ್ನಲ್ಲೇ ರಾಮಕೃಷ್ಣಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆಯ ಆರಂಭಿಸಿದ್ದಾರೆ.