ಚಿಕ್ಕಬಳ್ಳಾಪುರ: ಹೋಂ ಕ್ವಾರಂಟೈನ್ನಲ್ಲಿರುವ ವ್ಯಕ್ತಿಯ ಕುಟುಂಬ ಒಂದು ವೇಳೆ ಬಾಡಿಗೆ ಮನೆಯಲ್ಲಿದ್ದು, ಮನೆಯ ಮಾಲೀಕರು ಅವರನ್ನು ಮನೆ ಖಾಲಿ ಮಾಡುವಂತೆ ಒತ್ತಡ ಹೇರಿ ಕಿರುಕುಳ ನೀಡುತ್ತಿದ್ದರೆ ಅಂತ ಮಾಲೀಕರ ವಿರುದ್ಧ ಕಠಿಣ ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ ಎಂದು ಡಿಸಿ ಆರ್.ಲತಾ ಹೇಳಿದ್ದಾರೆ.
ಬಾಡಿಗೆ ಮನೆಯಲ್ಲಿರುವ ಹೋಂ ಕ್ವಾರಂಟೈನ್ಗೆ ಒಳಗಾದವರಷ್ಟೇ ಅಲ್ಲದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಆಶಾ ಕಾರ್ಯಕರ್ತರು, ಶುಶ್ರೂಷಕಿಯರು ಹಾಗೂ ಕೋವಿಡ್-19ರ ನಿಯಂತ್ರಣದಲ್ಲಿ ಕಾರ್ಯನಿರತರೆಲ್ಲರಿಗೂ ಈ ಕಾನೂನು ಅನ್ವಯವಾಗುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಜನರು ಲಾಕ್ಡೌನ್ಗೆ ಸಹಕರಿಸುತ್ತಿದ್ದಾರೆ. ಮತ್ತಷ್ಟು ಸಹಕಾರದ ಅಗತ್ಯ ಪೊಲೀಸರಿಗೆ ಬೇಕಾಗಿದೆ ಎಂದು ಮನವಿ ಮಾಡಿಕೊಂಡರು. ವರ್ತಕರು, ತರಕಾರಿ ಮಾರಾಟಗಾರರು ಮತ್ತಿತರರು ಅಗತ್ಯ ಸೇವೆಗಳಲ್ಲಿ ತೊಡಗಿದ್ದು ಅವರಿಗೆ ಓಡಾಡಲು ಅವಕಾಶ ನೀಡಿ ಪಾಸ್ ನೀಡಲಾಗುವುದು ಎಂದರು.
ಹೋಂ ಕ್ವಾರಂಟೈನ್ ನಡಿ ಇರುವವರು ಹೊರಗೆ ಓಡಾಡುವಂತಿಲ್ಲ. ಒಂದು ವೇಳೆ ಅನುಮತಿ ಇಲ್ಲದೆ ಓಡಾಡಿದರೆ ಅಂತವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ದಿನಸಿ, ಹಾಲು, ಔಷಧಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಸಾಮಾಜಿಕ ಅಂತರವನ್ನು ಕಾಪಾಡುವುದು ಅತ್ಯಗತ್ಯ ಎಂದು ತಿಳಿಸಿದರು.