ಚಿಕ್ಕಬಳ್ಳಾಪುರ: ಪೊಲೀಸ್ ಸಿಬ್ಬಂದಿ ಮೇಲೆಯೇ ಆರೋಪಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿಲು ಹೋದಾಗ ಆರೋಪಿ ಮಲ್ಲೋಹಳ್ಳಿಯ ಶಿವಶಂಕರ್ ಈ ಕೃತ್ಯ ಎಸಗಿದ್ದಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪಿಎಸ್ಐ ಗಜೇಂದ್ರ ಹಾಗೂ ರಾಧಾಕೃಷ್ಣ ಅವರು ಆರೋಪಿಯನ್ನು ತಡರಾತ್ರಿ ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿಯನ್ನು ಕಂಡ ಶಿವಶಂಕರ್, ರಾಧಾಕೃಷ್ಣರಿಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.
ಇದೇ ಸಂದರ್ಭದಲ್ಲಿ ಗಜೇಂದ್ರ ಅವರು ತಮ್ಮ ಆತ್ಮರಕ್ಷಣೆಗಾಗಿ ರಿವಾಲ್ವರ್ ನಿಂದ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಪರಿಣಾಮ ಆರೋಪಿ ಸ್ಥಳದಲ್ಲೇ ಬಿದ್ದಿದ್ದು, ನಂತರ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.