ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗಣಿ ಹಾಗೂ ಭೂ ವಿಜ್ಞಾನ ಇಲಾಖಾಧಿಕಾರಿಗಳು, ಅಕ್ರಮ ಗಣಿಗಾರಿಕೆಗೆ ಬಳಸುತ್ತಿದ್ದ 8 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ತಾಲೂಕು ಚಿಕ್ಕನಾಗವಲ್ಲಿ ಗ್ರಾಮದ ಬಳಿಯ ಬೆಟ್ಟದಲ್ಲಿ, ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಕ್ವಾರಿ ಮೇಲೆ ದಾಳಿ ನಡೆಸಿ, 5 ಟಿಪ್ಪರ್ ಗಳು, 1 ಕಂಪ್ರೈಸರ್ ವಾಹನ, 2 ಜೆಸಿಬಿ ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಾಗರ್ ಮಂಜು ಎಂಬಾತ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದನೆ ಎಂಬ ಆರೋಪ ಕೇಳಿ ಬಂದಿದ್ದು, ಈಗ ಈತ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಸಾಗರ್ ಮಂಜು ವಿರುದ್ಧ ಅಕ್ಕ ಪಕ್ಕದ ಗುತ್ತಿಗೆದಾರರು ಹಾಗೂ ಸಾರ್ವಜನಿಕರು ದೂರು ನೀಡಿದ್ದು, ಈ ಸಂಬಂಧ ತಡರಾತ್ರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ವಾಹನಗಳನ್ನು ಬಿಟ್ಟು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಖದೀಮರು ಪರಾರಿಯಾಗಿದ್ದಾರೆ.