ಚಿಕ್ಕಬಳ್ಳಾಪುರ: ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ, ರಾಜ್ಯದಲ್ಲಿ ಚುನಾವಣಾ ಪ್ರಚಾರ ಗರಿಗೆದರಿದ್ದು, ಇಂದು ದಾಖಲೆಗಳಿಲ್ಲದ 8.50 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ಇಂದು ಎರಡು ಕಡೆ ವಾಹನ ತಪಾಸಣೆ ಮಾಡುತ್ತಿದ್ದ ಚುನಾವಣಾಧಿಕಾರಿಗಳಿಗೆ, ಬಾಗೇಪಲ್ಲಿ ಟೋಲ್ ಗೇಟ್ ಬಳಿ 5 ಲಕ್ಷ ರೂ. ಮತ್ತು ನಂದಿ ಚೆಕ್ ಪೋಸ್ಟ್ ಬಳಿ 3.50 ಲಕ್ಷ ರೂ. ದಾಖಲೆಯಿಲ್ಲದ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಸೀರೆ ವಶ: ಇಂದು ಬೆಳಗ್ಗೆ ಮೈಸೂರಿನಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ 30 ಸಾವಿರ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್ ಗೆ ಮತ ನೀಡಿ ಎನ್ನುವ ಕರಪತ್ರಗಳಿವೆ.
ಈ ಕುರಿತು ಸಿ.ಪಿ.ಯೋಗೇಶ್ವರ್ ಚುನಾವಣೆ ಮೊದಲೇ ಸಭೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರು ಹುಣಸೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಆದರೆ ಅನರ್ಹರ ಕುರಿತು ಫಲಿತಾಂಶ ಸುಪ್ರೀಂ ಕೋರ್ಟ್ ಫಲಿತಾಂಶಕ್ಕೂ ಮುನ್ನ ಬಿಜೆಪಿಯಿಂದ ಯೋಗೇಶ್ವರ್ ಸ್ಪರ್ಧಿಸಲು ಎಂದು ಹೇಳಲಾಗಿತ್ತು. ಹೀಗಾಗಿ ಯೋಗೇಶ್ವರ್ ಅವರೇ ಚುನಾವಣೆಗಾಗಿ ಈ ಎಲ್ಲ ಸಿದ್ಧತೆ ನಡೆಸಿದ್ದರಾ ಎಂಬ ಪ್ರಶ್ನೆ ಇದೀಗ ಮೂಡಿದೆ.