ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಇಂದು ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಡಿಸಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ ಹಾಗೂ ಎದುರುಗಡೆ ಮನೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.
ಮುನ್ನೆಚ್ಚರಿಕೆ ಕ್ರಮವಾಗಿ ವೃದ್ಧ ಮೃತಪಟ್ಟಾಗ 17ನೇ ವಾರ್ಡು ಸೇರಿದಂತೆ ಅಕ್ಕ ಪಕ್ಕದ ಮೂರ್ನಾಲ್ಕು ವಾರ್ಡುಗಳನ್ನು ಮಾತ್ರ ಸೀಲ್ಡೌನ್ ಮಾಡಲಾಗಿತ್ತು. ಈಗ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಇಡೀ ಚಿಕ್ಕಬಳ್ಳಾಪುರ ನಗರವನ್ನೇ ಸಂಪೂರ್ಣ ಸೀಲ್ಡೌನ್ ಮಾಡಲಾಗುತ್ತಿದೆ. ಆಯಾ ವಾರ್ಡುವಾರು ಸ್ವಯಂಸೇವಕರ ಮೂಲಕ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸದ್ಯ ಚಿಕ್ಕಬಳ್ಳಾಪುರ ನಗರದ ಜನತೆ ಇನ್ನೂ ಮುಂದೆ ಅಗತ್ಯ ವಸ್ತುಗಳ ಖರೀದಿ ನೆಪದಲ್ಲೂ ಹೊರಗೆ ಬರುವಂತಿಲ್ಲ. ಪ್ರಸ್ತುತ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 16ಕ್ಕೆ ಏರಿದ್ದು, 8 ಮಂದಿ ಗುಣಮುಖರಾಗಿದ್ದಾರೆ. ಜೊತೆಗೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ 06 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಡಿಸಿ ಮಾಹಿತಿ ನೀಡಿದರು.