– ಕೊರೊನಾ ವೈರಸ್ ತಡೆ ಬಗ್ಗೆ ಚರ್ಚೆ
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮಪಂಚಾಯತ್ ಅಧ್ಯಕ್ಷ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಂವಾದ ನಡೆಸಿದರು.
ಅಂದಹಾಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ಇಬ್ಬರು ಗ್ರಾಮಪಂಚಾಯ್ತಿ ಅಧ್ಯಕ್ಷರು ಅಯ್ಕೆಯಾಗಿದ್ದರು ಎನ್ನಲಾಗಿದೆ. ಇದರಲ್ಲಿ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿಯ ಗ್ರಾಮಪಂಚಾಯತ್ ಅಧ್ಯಕ್ಷ ನವೀನ್ ಕುಮಾರ್ ಸಹ ಒಬ್ಬರು. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ಮೋದಿಯವರ ಜೊತೆ ಸಂವಾದ ನಡೆಸಿದರು.
ಸಂವಾದದಲ್ಲಿ ಕೊರೊನಾ ವೈರಸ್ ತಡೆಯುವ ಸಲುವಾಗಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಮೋದಿ ಮಾಹಿತಿ ಪಡೆದುಕೊಂಡರು. ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಫೌಜಿಯಾ ತರನಂ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಚಿಕ್ಕನರಸಿಂಹಯ್ಯ ಸೇರಿದಂತೆ ಕೆಲ ಜಿಲ್ಲಾ ಪಂಚಾಯತ್ ಸದಸ್ಯರು ಭಾಗವಹಿಸಿದ್ದರು. ಸಂವಾದದ ನಂತರ ಪ್ರತಿಕ್ರಿಯಿಸಿದ ಗ್ರಾಮಪಂಚಾಯತ್ ಅಧ್ಯಕ್ಷ ನವೀನ್ ಕುಮಾರ್, ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಮೋದಿಯವರ ಜೊತೆ ಮಾತನಾಡುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಆದರೆ ಈಗ ಮಾತನಾಡಿರೋದು ಬಹಳ ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಸಿಇಓ ಫೌಜಿಯಾ ತರನಂ ಮಾತನಾಡಿ ಮೋದಿ ಅವರು 4-5 ನಿಮಿಷಗಳ ಕಾಲ ನಮ್ಮ ಜಿಲ್ಲೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಜೊತೆ ಮಾತನಾಡಿದರು, ಕೊರೊನಾ ಬಗ್ಗೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತೆಗೆದುಕೊಂಡ ಕ್ರಮಗಳು. ಮನೆ ಮನೆಗೆ ಪಡಿತರ ವಿತರಣೆ ಮಾಡಿದ್ದು, ವಲಸಿಗರಿಗೆ ಸೂಕ್ತ ವಸತಿ ಊಟ ವ್ಯವಸ್ಥೆ ಹಾಗೂ ಔಷಧಿಗಳ ವಿತರಣೆ ಮಾಡಿದರ ಬಗ್ಗೆ ಮಾಹಿತಿ ಪಡೆದುಕೊಂಡರು. ಮಾಹಿತಿ ನೀಡಿದ ನಂತರ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆಗಳನ್ನ ಸಲ್ಲಿಸಿದರು ಎಂದು ತಿಳಿಸಿದರು.