ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಸಂದ್ರ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಅಳತೆಯಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿಯನ್ನು ನೀಡಲು ಆದೇಶ ನೀಡಿದೆ. ಆದರೆ ಮಲ್ಲಸಂದ್ರ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ 30 ಕೆಜಿ ಅಕ್ಕಿ ನೀಡಬೇಕಾಗಿದ್ದ ಅಳತೆಯಲ್ಲಿ 25 ಕೆಜಿ ನೀಡುತ್ತಿದ್ದು ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ನ್ಯಾಯಬೆಲೆ ಅಂಗಡಿಯಲ್ಲಿ ಮಲ್ಲಸಂದ್ರ, ಕದಿರನ್ನಾಗಾರಪಲ್ಲಿ, ಊಗಲನಾಗೇಪಲ್ಲಿ ಗ್ರಾಮಗಳಿಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲಾಗುತ್ತಿದೆ.
ಈ ರೀತಿ ಪ್ರತಿಯೊಬ್ಬರಿಗೂ 1 ಕೆಜಿ, 2 ಕೆಜಿ, ಮತ್ತು 3 ಕೆಜಿ ತೂಕದಲ್ಲಿ ಕಡಿತ ಮಾಡಿ ಕಡಿಮೆ ನೀಡುತ್ತಿದ್ದರೆ. ಇದೇ ರೀತಿ ಮಾಲೀಕ ಉಳಿತಾಯ ಮಾಡಿ ಲಾಭಗಳಿಸುತ್ತಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಿ ಮಾಲೀಕನಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕು ಇನ್ನು ಮುಂದೆ ಈ ರೀತಿ ನಡೆಯದಂತೆ ನಮಗೆ ಸೂಕ್ತ ನ್ಯಾಯಕೊಡಿಸಬೇಕೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.