ಚಿಕ್ಕಬಳ್ಳಾಪುರ: ಮೆಡಿಕಲ್ ಕಾಲೇಜು ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಜೊತೆಗೆ ಜಟಾಪಟಿ ನಡೆಸಿರುವ ಚಿಕ್ಕಬಳ್ಳಾಪುರ ಅನರ್ಹ ಶಾಸಕ ಸುಧಾಕರ್, ಇದೀಗ ಖುದ್ದು ಡಿಕೆ ಶಿವಕುಮಾರ್ ಅವರ ಮನೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸುವುದಾಗಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಧಾಕರ್, ವೈಯಕ್ತಿಕವಾಗಿ ನಾನು ಡಿಕೆಶಿ ಸ್ನೇಹಿತರಾಗಿದ್ದು, ಅಕ್ಕಪಕ್ಕದ ಮನೆಯವರಾಗಿದ್ದೇವೆ. ಅವರು ಜೈಲಿನಿಂದ ಬಂದ ಮೇಲೆ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಬೇಕೆಂದಿದ್ದೆ. ಆದರೆ ಮೆಡಿಕಲ್ ಕಾಲೇಜು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಉಂಟಾದ ಪರಿಣಾಮ ಭೇಟಿಯಾಗಲು ಸಾಧ್ಯವಾಗಲಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಬಿಡುವಿನಲ್ಲಿದ್ದಾಗ ಅವರ ಮನೆಗೆ ಹೋಗಿ ಯೋಗಕ್ಷೇಮ ವಿಚಾರಿಸುವುದಾಗಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜು ವಿಚಾರದಲ್ಲಿ ಡಿಕೆಶಿ ಸ್ವತಂತ್ರರಾಗಿದ್ದು, ಈ ಕುರಿತು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ನ್ಯಾಯಬದ್ಧ ಹೋರಾಟ ಮಾಡಲಿ ನನ್ನದೇನು ತಕರಾರಿಲ್ಲ ಎಂದರು. ನಿನ್ನೆ ತಾನೇ ಸುಧಾಕರ್ ತಮ್ಮ ತಂದೆ ಕೇಶವರೆಡ್ಡಿ ಡಿಕೆಶಿ ವಿರುದ್ಧ ಮಾತನಾಡಿದ್ದ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಕ್ಷಮೆ ಕೋರಿದ್ದಕ್ಕೆ ಸ್ಪಷ್ಟನೆ ನೀಡಿದ ಸುಧಾಕರ್ ಇದೀಗ ಖುದ್ದು ತಾನೇ ಭೇಟಿಯಾಗುವುದಾಗಿ ಹೇಳಿದರು.
ಇದೇ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಮೆಡಿಕಲ್ ಕಾಲೇಜು ಘೋಷಣೆ ಮಾಡಿರುವ ಸಿಎಂ ಯಡಿಯೂರಪ್ಪ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಮೆಡಿಕಲ್ ಕಾಲೇಜು ಶಂಕುಸ್ಥಾಪನೆಗೆ ನವೆಂಬರ್ 8 ರಂದು ಜಿಲ್ಲೆಗೆ ಸಿಎಂ ಯಡಿಯೂರಪ್ಪ ಬರಲಿದ್ದಾರೆಂದು ಸುಧಾಕರ್ ತಿಳಿಸಿದರು.