ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಮತ್ತೆ ನೆತ್ತರು ಹರಿದಿದೆ. ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಗೌರಿ ಕಾಲುವೆ ಬಳಿ ಉಪ್ಪಳ್ಳಿ ನಿವಾಸಿ ಬಿಜೆಪಿ ಮುಖಂಡ 46 ವರ್ಷದ ಅನ್ವರ್ ಮೃತ ದುರ್ದೈವಿ. ಶುಕ್ರವಾರ ರಾತ್ರಿ ಸುಮಾರು 9.30ಕ್ಕೆ ಈ ಘಟನೆ ನಡೆದಿದ್ದು, ಅನ್ವರ್ ರನ್ನ ದುಷ್ಕರ್ಮಿಗಳು ಚೂರಿಯಿಂದ ಐದು ಬಾರಿ ಇರಿದಿದ್ದಾರೆ. ಹೊಟ್ಟೆಯಲ್ಲಿರುವ ಕರುಳು ಕಿತ್ತು ಬರುವಂತೆ ಅನ್ವರ್ ನ ಹೊಟ್ಟೆ ಸೀಳಿದ್ದಾರೆ.
ರಕ್ತದ ಮಡುವಿನಲ್ಲಿ ರಸ್ತೆ ಮಧ್ಯೆ ಬಿದ್ದು ಒದ್ದಾಡುತ್ತಿದ್ದ ಅನ್ವರ್ ನನ್ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಎಎಸ್ಪಿ ಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಅನ್ವರ್ ನನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಸದ್ಯ ಅನ್ವರ್ ಮೃತದೇಹವನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಇಡಲಾಗಿದೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಸಂಬಂಧಿಕರು ಹಾಗೂ ಬಿಜೆಪಿ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇತ್ತ ಮೃತರ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿದೆ.
40 ವರ್ಷದ ಅನ್ವರ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಪ್ತನೆಂದೇ ಗುರುತಿಸಿಕೊಂಡಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಅನ್ವರ್ ಅಲ್ವಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿಯೂ ಬಿಜೆಪಿಯಲ್ಲಿ ಕೆಲಸ ಮಾಡಿದ್ದರು.