ಚಿಕ್ಕಮಗಳೂರು: ಕಾಫಿನಾಡಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಗಿರಿಶ್ರೇಣಿ ನೋಡಲು ಬರುವ ಪ್ರವಾಸಿಗರನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಮೂರು ದಿನಗಳ ಕಾಲ ನಿರ್ಬಂಧಿಸಿದೆ.
ಡಿಸೆಂಬರ್ 21, 22, 23 ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಆಚರಣೆ ನಡೆಯುತ್ತಿದೆ. ಆದರಿಂದ ಈ ಮೂರು ದಿನಗಳು ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಶ್ರೇಣಿ ಪ್ರವಾಸಿಗರಿಗೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧವೇರಿದೆ. ವಿ.ಎಚ್.ಪಿ, ಬಜರಂಗದಳ ಸಂಘಟನೆಗಳ ಕಾರ್ಯಕರ್ತರಿಂದ ಜಿಲ್ಲೆಯಲ್ಲಿ ದತ್ತ ಜಯಂತಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದತ್ತ ಪೀಠಕ್ಕೆ ಆಗಮಿಸುವ ನಿರೀಕ್ಷೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಭದ್ರತಾ ದೃಷ್ಟಿಯಿಂದ ಗಿರಿಶ್ರೇಣಿ ಪ್ರದೇಶಗಳಿಗೆ ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ.
ದತ್ತ ಜಯಂತಿ ಪ್ರಯುಕ್ತ ದತ್ತ ಪೀಠದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರುವಾಸಿ ಆಗಿರುವುದರಿಂದ ಇಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಲ್ಲಿರುವ ಗಿರಿಶ್ರೇಣಿಗಳನ್ನು ವೀಕ್ಷಿಸಿ ಖುಷಿ ಪಡುತ್ತಾರೆ. ಆದರೆ ಮೂರು ದಿನಗಳ ಕಾಲ ಗಿರಿಶ್ರೇಣಿಗಳಿಗೆ ಪ್ರವಾಸಿಗರನ್ನು ನಿರ್ಬಂಧ ಹೇರಿರುವುದರಿಂದ ನಿಸರ್ಗದ ಸೌಂದರ್ಯ ಸವಿಯಲು ಬರುವ ಜನರಿಗೆ ಕೊಂಚ ಬೇಸರವಾಗಲಿದೆ.
ದತ್ತ ಜಯಂತಿ ಆಚರಣೆ ಪ್ರಯುಕ್ತ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂದು ಜಿಲ್ಲಾಡಳಿತವು ದತ್ತಪೀಠ ಸೇರಿದಂತೆ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com