ಚಿಕ್ಕಮಗಳೂರು: ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜಕ್ಕೆ ಅವಮಾನಗೈದ ಆರೋಪ ಹಿನ್ನೆಲೆ ಜಿಲ್ಲೆಯ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನಗೊಳಿಸಲಾಗಿದೆ.
ಕೊಪ್ಪ ತಾಲೂಕಿನ ತಲಮಕ್ಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಹಾಗೂ ಸಹ ಶಿಕ್ಷಕ ಓಂಕಾರಪ್ಪ ಅಮಾನತುಗೊಂಡವರು. ಜನವರಿ 26ರ ಗಣರಾಜ್ಯೋತ್ಸವದಂದು ಶಿಕ್ಷಕರಾದ ರೇವತಿ ಹಾಗೂ ಓಂಕಾರಪ್ಪ ಅವರ ಬೇಜವಾಬ್ದಾರಿಯಿಂದ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ. ಈ ವಿಷಯವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ನಮ್ಮ ಗ್ರಾಮದ ಶಾಲೆಯ ಗೌರವನ್ನು ಹಾಳು ಮಾಡಿರುವುದಲ್ಲದೆ, ಇವರಿಬ್ಬರ ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ಶಾಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಶಾಲಾಭಿವೃದ್ಧಿ ಮಂಡಳಿ, ಪೋಷಕರು ಹಾಗೂ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಬಿಇಓಗೆ ದೂರು ನೀಡಿದ್ದರು.
ಶಿಕ್ಷಕರಾದ ರೇವತಿ ಹಾಗೂ ಓಂಕಾರಪ್ಪ ಅವರನ್ನು ಬೇರೆ ಶಾಲೆಗೆ ವರ್ಗಾಯಿಸಿ ಪ್ರಕರಣದ ಸಂಬಂಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ದೂರಿನಲ್ಲಿ ಒತ್ತಾಯಿಸಲಾಗಿತ್ತು. ಅಷ್ಟೇ ಅಲ್ಲದೆ ಅವರ ಮೇಲೆ ಕಾನೂನು ಕ್ರಮ ಜರುಗಿಸದಿದ್ದರೆ ನಾವೆಲ್ಲರೂ ಸಾಮೂಹಿಕವಾಗಿ ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.
ಇದು ಶಿಕ್ಷಕರ ವೃತ್ತಿಗೆ ತರವಲ್ಲದ ಕೆಲಸವಾಗಿದೆ. ರಾಷ್ಟ್ರಧ್ವಜಕ್ಕೆ ಶಿಕ್ಷಕರು ಅವಮಾನ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಜೊತೆಗೆ ಇಲಾಖೆಯ ವಿಚಾರಣೆಯನ್ನು ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.