Crime
ರಸ್ತೆಯಲ್ಲಿ ಹೋಗುತ್ತಿದ್ದಾಗ ಬಿತ್ತು ಮರ – 5ರ ಮಗು ಸಾವು

ಶಿವಮೊಗ್ಗ: ರಸ್ತೆಯಲ್ಲಿ ಹೋಗುತ್ತಿದ್ದ ಮಗುವಿನ ಮೇಲೆ ಒಣಗಿದ ಮರ ಬಿದ್ದ ಪರಿಣಾಮ ಮಗು ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.
5 ವರ್ಷದ ಪ್ರತೀಕ್ಷಾ ಬುಧವಾರ ಸಂಜೆ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಮರ ಬಿದ್ದು ಸಾವನ್ನಪ್ಪಿದ್ದಾಳೆ. ರಸ್ತೆ ಬದಿಯಲ್ಲಿ ಒಣಗಿ ನಿಂತಿದ್ದ ಮರ ಏಕಾಏಕಿ ಮಗು ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪ್ರತೀಕ್ಷಾಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತೀಕ್ಷಾ ಮೃತಪಟ್ಟಿದ್ದಾಳೆ.
ಪ್ರತೀಕ್ಷಾಳನ್ನು ಕಳೆದುಕೊಂಡ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ರಸ್ತೆ ಬದಿಯಲ್ಲಿ ನೂರಾರು ಮರಗಳು ಒಣಗಿ ನಿಂತಿದ್ದು ಇನ್ನಷ್ಟು ಬಲಿ ತೆಗೆದುಕೊಳ್ಳುವ ಮೊದಲು ಒಣಗಿದ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
