ಗುಲ್ಬರ್ಗ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಭಾರಿ ಕಸರತ್ತು ನಡೆಸುತ್ತಿವೆ. ಎರಡು ರಾಷ್ಟ್ರೀಯ ಪಕ್ಷಗಳು ಈ ಕ್ಷೇತ್ರವನ್ನು ಪ್ರತಿಷ್ಠೆಯ ಕಣವನ್ನಾಗಿಸಿದ್ದು ಭಾರೀ ಪೈಪೋಟಿ ಆರಂಭವಾಗಿದೆ.
ಚಿಂಚೋಳಿ ಉಪಚುನಾವಣೆಯ ಉಸ್ತುವಾರಿಯನ್ನು ಉಪಮುಖ್ಯಮಂತ್ರಿ ಪರಮೇಶ್ವರ್ ವಹಿಸಿಕೊಂಡಿದ್ದು ಅವರ ನಿರ್ದೇಶನದಂತೆ ಪ್ರಚಾರ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಎಲ್ಲಾ ತಾಲೂಕಿನ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಓರ್ವ ಸಚಿವ ಮತ್ತು ಇಬ್ಬರು ಶಾಸಕರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಸಚಿವರಾದ ಬಂಡೆಪ್ಪ ಕಾಶೆಂಪುರ್, ಪ್ರಿಯಾಂಕ್ ಖರ್ಗೆ, ರಾಜಶೇಖರ್ ಪಾಟೀಲ್ ನೇತೃತ್ವದಲ್ಲಿ ಉಪಸಮರ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ.
ಕಾಂಗ್ರೆಸ್ ನಾಯಕರ ಮಾಸ್ಟರ್ ಪ್ಲಾನ್ಗೆ ಕಮಲ ನಾಯಕರು ರಣತಂತ್ರವನ್ನು ರೂಪಿಸಿದ್ದು. ಮಾಜಿ ಸಚಿವ ವಿ ಸೋಮಣ್ಣ, ಲಕ್ಷ್ಮಣ ಸವದಿ, ಶಾಸಕರಾದ ರಾಜುಗೌಡ, ದತ್ತಾತ್ರೇಯ ಪಾಟೀಲ್ ಸೇರಿದಂತೆ ಹಲವಾರು ಶಾಸಕರನ್ನು ನೇಮಕ ಮಾಡಿದ್ದಾರೆ. ಕ್ಷೇತ್ರದ ಪ್ರತಿ ಜಿಲ್ಲಾ ಪಂಚಾಯತ್ ನಾಯಕರನ್ನು ಉಸ್ತುವಾರಿಯಾಗಿ ನೇಮಕ ಮಾಡಿ ಚುನಾವಣೆ ಗೆಲ್ಲಲು ಪ್ರಯತ್ನ ನಡೆಸುತ್ತಿದ್ದಾರೆ.
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಲಬುರಗಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಖಾಲಿಯಾಗಿರುವ ಈ ಕ್ಷೇತ್ರಕ್ಕೆ ಮೆ.19 ರಂದು ಉಪಚುನಾವಣೆ ಘೋಷಣೆಯಾಗಿದೆ.