ಚಿತ್ರದುರ್ಗ: ಹೋಳಿಗೆ ಊಟ ಮಾಡಿದ 138 ಜನರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೋರಯ್ಯ ಎಂಬವರ ಮನೆಯಲ್ಲಿ ಯಲ್ಲಮ್ಮ ದೇವರ ಪೂಜೆಯ ನಂತರ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಸೇವಿಸಿದ ಕೆಲವೇ ಸಮಯದಲ್ಲಿ ನೂರಾರು ಜನರಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. 78 ಪುರಷರು, 40 ಜನ ಮಹಿಳೆಯರು ಮತ್ತು 20 ಜನ ಮಕ್ಕಳು ಹೋಳಿಗೆ ಊಟ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ.
ವಿಷಯ ತಿಳಿದ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಯ್ಕಲ್ ಗ್ರಾಮಕ್ಕೆ ತೆರಳಿದ್ದಾರೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ತಂಡ ಗ್ರಾಮದಲ್ಲಿ ತಾತ್ಕಾಲಿಕ ಕ್ಯಾಂಪ್ ತೆರೆದು ಅಸ್ವಸ್ಥರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಫುಡ್ ಪಾಯ್ಸನ್ ನಿಂದ ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 15 ಕ್ಕೂ ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಮುಂದಿನ ಮೂರು ದಿನಗಳ ಕಾಲ ಚಿಕಿತ್ಸೆ ನೀಡಲಾಗುತ್ತದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.