ಚಿತ್ರದುರ್ಗ: ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ವಿಳಂಬವಾಗಿರುವುದಕ್ಕಾಗಿ ಆರೋಗ್ಯ ಸಚಿವ ಶ್ರೀರಾಮುಲು ನೆರೆ ಸಂತ್ರಸ್ತರಲ್ಲಿ ಕ್ಷಮೆಯಾಚಿಸಿದ್ದಾರೆ.
ಹಿರಿಯೂರು ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್ಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದು, ಎರಡ್ಮೂರು ದಿನಗಳಲ್ಲಿ ನೆರೆ ಪರಿಹಾರ ಬರಲಿದೆ ಎಂದು ಭರವಸೆ ನೀಡಿದರು.
ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಂತ್ರಸ್ತರ ನೋವು ನಮಗೆ ಅರ್ಥ ಆಗುತ್ತದೆ. ಹೀಗಾಗಿ ನಮ್ಮ ಸರ್ಕಾರ ಸಂತ್ರಸ್ತರ ನೋವಿಗೆ ಸ್ಪಂದಿಸಲಿದೆ. ಬಿ.ಎಸ್, ಯಡಿಯೂರಪ್ಪ ಅವರು ನೇರ ನಿಷ್ಠುರ ರಾಜಕಾರಣಿಯಾಗಿದ್ದಾರೆ. ನೆರೆ ಪರಿಹಾರದ ವಿಚಾರದಲ್ಲಿ ಆರ್ಎಸ್ಎಸ್ ಹಾಗೂ ಬಿ.ಎಸ್. ಯಡಿಯೂರಪ್ಪ ಅಂತ ಲಿಂಕ್ ಮಾಡುವುದು ಬೇಡ ಎಂದು ಮನವಿ ಮಾಡಿಕೊಂಡರು.
ನೆರೆ ಪರಿಹಾರದ ವಿಚಾರದಲ್ಲಿ ಯಾರು ರಾಜಕೀಯ ಮಾಡುವುದು ಬೇಡ. ಅಗತ್ಯ ಬಿದ್ದರೆ ಕೇಂದ್ರದ ಬಳಿಗೆ ಎಲ್ಲರೂ ಒಟ್ಟಾಗಿ ಹೊಗೋಣ. ಯಾಕಂದರೆ ಕಾಂಗ್ರೆಸ್ನವರ ಮೇಲೂ ಜವಾಬ್ದಾರಿ ಇದೆ. ರಾಜ್ಯಕ್ಕೆ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಶ್ರೀರಾಮುಲು ಟಾಂಗ್ ಕೊಟ್ಟರು.