ಚಿತ್ರದುರ್ಗ: ಪಿಎಸ್ಐ ವರ್ಗಾವಣೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹಸ್ತಕ್ಷೇಪ ಮಾಡಿದ್ದಾರೆ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.
ಇಂದು ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸ್ವಪಕ್ಷ ಶಾಸಕರನ್ನು ಕಡೆಗಣನೆ ಮಾಡುತ್ತಿದೆ. ಕ್ಷೇತ್ರಕ್ಕೆ ಅನುಧಾನ ನೀಡುವಲ್ಲಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಪಿಎಸ್ಐ ವರ್ಗಾವಣೆ ವಿಚಾರದಲ್ಲಿ ಶಾಸಕರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದ್ದಾರೆ ಎಂದು ಅಸಮಧಾನ ಹೊರಹಾಕಿದ್ದಾರೆ.
ಬಿಜೆಪಿಯಲ್ಲಿ ನನ್ನ ಜೊತೆ ಹೆಚ್ಚು ಒಡನಾಟ ಹೊಂದಿರೋ ಆರ್. ಅಶೋಕ್ಗೆ ಉನ್ನತವಾದ ಸ್ಥಾನಮಾನ ಸಿಕ್ಕರೆ ನಮ್ಮ ಕ್ಷೇತ್ರವನ್ನು ಗುರುತಿಸುತ್ತಾರೆ. ಆದ್ದರಿಂದ ಇಂದು ನಾನು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಶೋಕ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ ಮಾಡುತ್ತೇನೆ. ನಂತರ ಸಚಿವ ಆರ್.ಅಶೋಕ್ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸ್ವಪಕ್ಷ ಶಾಸಕರ ಮಾತಿಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮನನೊಂದ ಗೂಳಿಹಟ್ಟಿ ಶೇಖರ್, ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ಮಾಡಿ ಕಾರ್ಯಕರ್ತರ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.