ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಹಾಗೂ ನಿವೃತ್ತಿ ಅವಧಿಯನ್ನು ಹೆಚ್ಚಿಸುವಂತೆ ನ್ಯಾ.ರಂಜನ್ ಗೊಗೋಯ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ನ್ಯಾಯಮೂರ್ತಿಗಳ ನೇಮಕ ಮಾಡಿಕೊಳ್ಳುವ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಸಂವಿಧಾನ ವಿಧಿ 128 ಮತ್ತು 224ಎ ತಿದ್ದುಪಡಿ ತಂದು ಹಲವು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ 3 ಪತ್ರ ಬರೆದಿರುವ ನ್ಯಾ.ರಂಜನ್ ಗೊಗೋಯ್, ಈವರೆಗೆ 58,669 ಪ್ರಕರಣಗಳು ಬಾಕಿ ಉಳಿದಿದ್ದು, ಪ್ರತಿ ದಿನ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ನ್ಯಾಯಮೂರ್ತಿಗಳ ಸಂಖ್ಯೆ ಕಡಿಮೆ ಇರುವುದರಿಂದ ಪ್ರಕರಣಗಳು ಬಾಕಿ ಉಳಿದಿವೆ. ಅಲ್ಲದೆ, ನ್ಯಾಯಾಧೀಶರ ಕೊರತೆಯಿಂದಾಗಿ ಕಾನೂನಿನ ಪ್ರಶ್ನೆಗಳನ್ನು ಒಳಗೊಂಡ ಪ್ರಕರಣ ನಿರ್ಧರಿಸಲು ಅಗತ್ಯ ಸಂವಿಧಾನ ಪೀಠಗಳನ್ನು ರಚಿಸಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
1989ರಲ್ಲಿ ಅಂದರೆ ಮೂರು ದಶಕಗಳ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 18 ರಿಂದ 26ಕ್ಕೆ ಹೆಚ್ಚಿಸಲಾಗಿತ್ತು. ಇದಾದ ಎರಡು ದಶಕಗಳ ನಂತರ 2009ರಲ್ಲಿ ಈ ಸಂಖ್ಯೆಯನ್ನು ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ 31ಕ್ಕೆ ಹೆಚ್ಚಿಸಲಾಯಿತು. ಈ ಕುರಿತು ನೆನಪು ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಎರಡನೇ ಪತ್ರದಲ್ಲಿ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ಅವಧಿಯನ್ನು 62ರಿಂದ 65 ವರ್ಷಕ್ಕೆ ಹೆಚ್ಚಿಸುವ ಕುರಿತು ಸಂವಿಧಾನ ತಿದ್ದುಪಡಿ ತರಬೇಕು ಎಂದು ಗೊಗೋಯ್ ಅವರು ಮನವಿ ಮಾಡಿದ್ದಾರೆ. ಹೈ ಕೋರ್ಟ್ ನ್ಯಾಯಾಧೀಶರ 399(ಶೇ.37) ಹುದ್ದೆಗಳೂ ಸಹ ಖಾಲಿ ಇದ್ದು, ಶಿಘ್ರವೇ ಈ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಕಾರ್ಯನಿರತ ನ್ಯಾಯಾಧೀಶರ ಬಲವನ್ನು ಅನುಮೋದಿತ ನ್ಯಾಯಾಧೀಶರ ಮಟ್ಟಕ್ಕೆ ತರಲು ಸಾಧ್ಯವಿಲ್ಲ. ಆದರೆ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು ಗಮನಹರಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]