– ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮತ್ತೆ ಹೋರಾಟದ ಎಚ್ಚರಿಕೆ
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ (NEET Exam Scam)ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಕ್ಷ (CJP) ಮತ್ತೊಮ್ಮೆ ರಾಷ್ಟ್ರವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದೆ.
ಸುಪ್ರೀಂ ಕೋರ್ಟ್ ಎಫ್ಐಆರ್ಗಳ ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಪ್ರಕರಣಗಳನ್ನು ಆಯುಧವಾಗಿ ಬಳಸಬಹುದು ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿದೆ.
ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಪೊಲೀಸರಿಗೆ ಸೂಚಿಸಿದೆ. ಜೊತೆಗೆ, ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಬಂಧಿತರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಆದರೆ, ಈಗಾಗಲೇ ದಾಖಲಾಗಿರುವ ಎಫ್ಐಆರ್ಗಳ ತನಿಖೆ ಮುಂದುವರಿಸಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ ಈ ರಕ್ಷಣೆ ಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದೆ.
ಈ ಕುರಿತು ಪ್ರತಿಕ್ರಿಯಿಸಿದ CJP ವಕ್ತಾರ ಸೌರವ್ ದಾಸ್, ಜುಲೈ 25ರಂದು ಸರ್ಕಾರ ನೀಡಿದ್ದ ಭರವಸೆಗೆ ಈ ಬೆಳವಣಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ, ಎಫ್ಐಆರ್ಗಳನ್ನು ಹಿಂತೆಗೆದುಕೊಳ್ಳಲಾಗುತ್ತದೆ ಎಂದು ಸರ್ಕಾರ ಹೇಳಿದ್ದ ಕಾರಣವೇ ನಾವು ಪ್ರತಿಭಟನೆ ಹಿಂಪಡೆದಿದ್ದೇವೆ ಎಂದು ಹೇಳಿದರು.
ಈಗ ಆ ಭರವಸೆ ಉಲ್ಲಂಘನೆಯಾಗುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಬಿಜೆಪಿ ಆಡಳಿತದ ರಾಜ್ಯಗಳು ಎಫ್ಐಆರ್ಗಳನ್ನು ಮುಂದುವರಿಸಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಬಹುದು ಎಂಬ ಅನುಮಾನವಿದೆ ಎಂದು ಸೌರವ್ ದಾಸ್ ಆರೋಪಿಸಿದರು. ಇದನ್ನೂ ಓದಿ: ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂ
ಸರ್ಕಾರ ತನ್ನ ಮಾತಿನಂತೆ ನಡೆದು ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್ಐಆರ್ಗಳನ್ನು ಹಿಂಪಡೆಯಬೇಕು. ಇಲ್ಲವಾದರೆ, ವಿದ್ಯಾರ್ಥಿಗಳ ಪರವಾಗಿ ಮತ್ತೆ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭಿಸುವುದಾಗಿ CJP ಎಚ್ಚರಿಕೆ ನೀಡಿದೆ.
ಈ ಹಿಂದೆ ಜೂನ್ 20ರಿಂದ ಜಂತರ್ ಮಂತರ್ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ CJP ನಿರಂತರ ಪ್ರತಿಭಟನೆ ನಡೆಸಿತ್ತು. ಬಳಿಕ ಸರ್ಕಾರದೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದ ನಂತರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಹಾಗೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು. ಇದನ್ನೂ ಓದಿ: ಮೋದಿ ಸರ್ಕಾರ ಏಕೆ NTA ಮುಖ್ಯಸ್ಥರನ್ನ ಉಳಿಸುತ್ತಿದೆ? ಅವ್ರಿಗೂ RSS ಜೊತೆ ಸಂಪರ್ಕ ಇದೆಯೇ? – ಗೌರವ್ ಗೊಗೊಯ್
