ಹುಬ್ಬಳ್ಳಿ/ ಹಾವೇರಿ: ರಾಜ್ಯದಲ್ಲಿ ಮಳೆ (Rain) ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಹಾವೇರಿ (Haveri) ಜಿಲ್ಲೆಯಲ್ಲಿ ಮೋಡ ಬಿತ್ತನೆ (Cloud Seeding) ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ್ (H.K Patil) ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಹೆಚ್.ಕೆ. ಪಾಟೀಲ್, ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ ತೀವ್ರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಮೋಡ ಬಿತ್ತನೆ ಕಾರ್ಯಕ್ರಮವನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳ ಅಭಿಪ್ರಾಯಕ್ಕಿಂತ ವಿಜ್ಞಾನಿಗಳ ಸಲಹೆಗೆ ಆದ್ಯತೆ ನೀಡಿ ತಕ್ಷಣ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು. ಕೇಂದ್ರ ಸರ್ಕಾರವೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹಾವೇರಿ | ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಸಜ್ಜಾದ ಶಾಸಕರು

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಹಾವೇರಿಯಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಇದನ್ನು ಸರ್ಕಾರಿ ಕಾರ್ಯಕ್ರಮವಾಗಿ ರಾಜ್ಯಾದ್ಯಂತ ವಿಸ್ತರಿಸುವ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಮೋಡಗಳಿರುವ ಸಮಯದಲ್ಲೇ ಈ ಕಾರ್ಯ ಕೈಗೊಳ್ಳುವುದು ಅತ್ಯಂತ ಮುಖ್ಯ ಎಂದರು.
ಶಾಸಕ ಪ್ರಕಾಶ್ ಕೋಳಿವಾಡ (Prakash Koliwad) ಮಾತನಾಡಿ, ಮೋಡ ಬಿತ್ತನೆಗೆ ಬಳಸುವ ವಿಶೇಷ ವಿಮಾನ ಈ ತಿಂಗಳು ಹುಬ್ಬಳ್ಳಿಯಲ್ಲೇ ಇರಲಿದ್ದು, ತೇವಾಂಶಯುಕ್ತ ಮೋಡಗಳು ಕಂಡುಬಂದ ತಕ್ಷಣ ಬಿತ್ತನೆ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿಸಿದರು. ಸದ್ಯ ಮೂರು ದಿನಗಳ ಕಾರ್ಯಯೋಜನೆ ರೂಪಿಸಲಾಗಿದೆ ಎಂದರು.
ಶಾಸಕ ಎನ್.ಹೆಚ್. ಕೋನರೆಡ್ಡಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯ ಶಾಸಕರು ವೈಯಕ್ತಿಕವಾಗಿ ಈ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು. ರೈತರ ಹಿತದೃಷ್ಟಿಯಿಂದ ತ್ವರಿತ ನಿರ್ಧಾರ ಅಗತ್ಯ ಎಂದರು.
ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಆತಂಕದಲ್ಲಿರುವ ರೈತರ ನಡುವೆ, ಮೋಡ ಬಿತ್ತನೆ ಪ್ರಯೋಗ ಮಳೆಯ ನಿರೀಕ್ಷೆಗೆ ಹೊಸ ಭರವಸೆ ಮೂಡಿಸಿದೆ. ಇದೀಗ ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಲ್ಲೂ ಇದೇ ಮಾದರಿಯ ಕಾರ್ಯಕ್ರಮ ಜಾರಿಯಾಗುವ ಸಾಧ್ಯತೆ ಕುರಿತು ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ 2-3 ದಿನ ಮಳೆ ಮುನ್ಸೂಚನೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
