ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಮರು ಸ್ಥಾಪನೆ ಸೇರಿದಂತೆ ತುರ್ತು ಕೆಲಸಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಸೇರಿದಂತೆ ಮೂಲಸೌಕರ್ಯಗಳ ಮರು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ ನೆರೆಹಾನಿ ಕುರಿತಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಸಭೆ ನಡೆಸಿ ಮೂರು ಜಿಲ್ಲೆಯಲ್ಲಿ 1,062 ಮನೆಗಳಿಗೆ ಹಾನಿಯಾಗಿದೆ. ಕರಾವಳಿಯಲ್ಲೇ 2,187 ಕಿಲೋ ಮೀಟರ್ ರಸ್ತೆ ಹಾನಿಯಾಗಿದೆ. 5,000ಕ್ಕೂ ಹೆಚ್ಚು ವಿದ್ಯುತ್ ಕಂಬ ಬಿದ್ದಿದೆ. ದ.ಕ ಉಡುಪಿ, ಉ.ಕ ದಲ್ಲಿ 168 ಸೇತುವೆಗಳಿಗೆ ಹಾನಿಯಾಗಿದೆ ಎಂದು ಸಿಎಂ ಮಾಹಿತಿ ನೀಡಿದರು. ಇದನ್ನೂ ಓದಿ: ನಮ್ಮದು ಘರ್ಜಿಸುವ ಸಿಂಹ, ಕಾಂಗ್ರೆಸ್ನದ್ದು ಮಲಗಿದ ಸಿಂಹ: ಬೊಮ್ಮಾಯಿ
ಮಳೆಯಿಂದಾಗಿ ಬಹಳಷ್ಟು ರಸ್ತೆಗಳು ಹದಗೆಟ್ಟಿವೆ, ಮೂಲಸೌಕರ್ಯಗಳು ಹಾಳಾಗಿವೆ. ಹೀಗಾಗಿ ತಕ್ಷಣ ಮೂಲಸೌಕರ್ಯಗಳನ್ನು ಮರು ಸ್ಥಾಪನೆ ಮಾಡುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಮೂಲಸೌಕರ್ಯ ಹಾನಿಗೆ ಈ 500 ಕೋಟಿ ಹಣವನ್ನು ಬಳಕೆ ಮಾಡಿಕೊಳ್ಳಲಾಗುವುದು. ಬೆಳೆ ನಾಶಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ. ಕಾಳಜಿ ಕೇಂದ್ರದಲ್ಲಿ ಆಹಾರ ಜೊತೆ ಮೊಟ್ಟೆ ಕೊಡುತ್ತೇವೆ. ಸಂತ್ರಸ್ತರು ಉಳಿದುಕೊಂಡ ಮನೆಗೆ ರೇಷನ್ ತಲುಪಿಸುತ್ತೇವೆ. ಭೂಕಂಪನ, ಭೂಕುಸಿತ ಆದ ಬಗ್ಗೆ ಅಮೃತ ವಿವಿಯವರು ಅಧ್ಯಯನ ಮಾಡುತ್ತಾರೆ. ವರದಿ ಬಂದಕೂಡಲೇ ಪರಿಹಾರಕ್ಕೆ ಸರ್ಕಾರ ಸಿದ್ಧವಿದೆ. ಕಡಲ್ಕೊರೆತಕ್ಕೆ ಎಡಿಬಿ ಮೂಲಕ 300 ಕೋಟಿ ಖರ್ಚಾಗಿದೆ. ಕೇರಳ ಮಾದರಿಯಲ್ಲಿ ಒಂದು ಕಿಲೋಮೀಟರ್ ಕಡಲಿಗೆ ತಡೆಗೋಡೆ ಮಾಡುವ ಚಿಂತನೆ ಇದೆ. ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುವುದು. ಸರಿಯಾದ ಅಧ್ಯಯನ ಮಾಡಿ ಅನುಷ್ಟಾನ ಮಾಡಲು ತೀರ್ಮಾನ ಮಾಡಲಾಗುವುದು. ಶಾಶ್ವತ ಪರಿಹಾರಕ್ಕೆ ಎಲ್ಲಾ ಕ್ರಮ ಕೈಗೊಳ್ಳಲಾಗುವುದೆಂದರು. ಇದನ್ನೂ ಓದಿ: ಕಾಂಗ್ರೆಸ್ಗೆ ಆಳಾಗಿ ಬರೆಯುವವರಿಗೆ RSS ಆಳ ಅಗಲ ತಿಳಿಯುವುದಿಲ್ಲ: ಪ್ರತಾಪ್ ಸಿಂಹ
ಜಿಲ್ಲಾಮಟ್ಟದಲ್ಲೇ ತಕ್ಷಣ ಕಡಲ್ಕೊರೆತ ತಡೆಗೆ ಕ್ರಮಕ್ಕೆ ಸೂಚಿಸಲಾಗಿದೆ. ಬೆಳಗಾವಿ, ಉತ್ತರ ಕರ್ನಾಟಕ ಜಿಲ್ಲೆಗೆ ಮುಂದಿನ ವಾರ ಪ್ರವಾಸ ಮಾಡುತ್ತೇನೆ. ರಾಜ್ಯದ ನೆರೆ ಹಾನಿಗೆ ತುರ್ತಾಗಿ 500 ಕೋಟಿ ರೂ. ತಕ್ಷಣ ಮೊದಲ ಹಂತದಲ್ಲಿ ಬಿಡುಗಡೆ ಮಾಡುತ್ತೇನೆ. ಎಲ್ಲಾ ಜಿಲ್ಲೆಯಿಂದ ವರದಿ ತರಿಸಿಕೊಂಡ ನಂತರ ಬಾಕಿ ಉಳಿದ ಮೊತ್ತವನ್ನು ಬಿಡುಗಡೆ ಮಾಡಲಾಗುವುದು. ನೆರೆ ಎದುರಿಸಲು ಕೇಂದ್ರದ ಮೊರೆ ಹೋಗುತ್ತೇವೆ. ಎಲ್ಲಾ ಜಿಲ್ಲೆಯ ವರದಿ ಬಂದ ನಂತರ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಹೇಳಿದರು.