ಬೆಂಗಳೂರು: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವು ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಬ್ಲ್ಯಾಕ್ ಫಂಗಸ್ ಚಿಕಿತ್ಸೆಯು ದುಬಾರಿಯಾಗಿದ್ದು, ಪ್ರತಿ ಇಂಜೆಕ್ಷನ್ಗೆ 10,000 ದಿಂದ 12,000 ರೂ. ಆಗುತ್ತದೆ. ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವೂ ನಾಲ್ಕು ವಾರಗಳ ಕಾಲ ಇಂಜೆಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ರೋಗಿಗಳ ಕುಟುಂಬದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬ್ಲ್ಯಾಕ್ ಫಂಗಸ್ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಅವರ ಎಲ್ಲಾ ಖರ್ಚನ್ನು ಸರ್ಕಾರವೇ ವಹಿಸಿಕೊಳ್ಳಲು ನಿರ್ಧರಿಸಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇದೇ ವೇಳೆ ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆ ಕುರಿತಂತೆ ತಜ್ಞರ ಸಲಹೆ ಪಡೆದಿದ್ದು, ಮಕ್ಕಳ ಆರೋಗ್ಯಕ್ಕಾಗಿಯೇ ಶಿಬಿರಗಳನ್ನು ಸ್ಥಾಪಿಸಲಾಗುವುದು ಹಾಗೂ ಅಪೌಷ್ಟಿಕ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಆಹಾರ ಕಿಟ್ಗಳನ್ನು ಒದಗಿಸುತ್ತದೆ. ಅಲ್ಲದೇ ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್
ಈಗಾಗಲೇ ಕರ್ನಾಟಕ ಸರ್ಕಾರ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಐಸಿಯು ಬೆಡ್ಗಳನ್ನು ಸಿದ್ಧಪಡಿಸಲು ನಿರ್ದೇಶಿಸಿದೆ. ಅಲ್ಲದೇ ವಿಜಯಪುರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 40 ವೆಂಟಿಲೇಟರ್ಗಳೊಂದಿಗೆ 120 ಬೆಡ್ಗಳ ನಿರ್ಮಿಸಿಲು ಸರ್ಕಾರ 22 ಕೋಟಿ ಹಣವನ್ನು ಬಿಡುಗಡೆಗೊಳಿಸಿದೆ. ಇದನ್ನೂ ಓದಿ:ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್