ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು.
ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆದಿದ್ದು, ಈ ವೇಳೆ ರಾಜ್ಯದ ಜಲ ವಿವಾದಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಬೊಮ್ಮಾಯಿ ಅವರು ವಹಿಸಿದ್ದು, ಮೇಕೆದಾಟು, ಮಹದಾಯಿ, ಕೃಷ್ಣ ಜಲ ವಿವಾದಗಳ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ಮಾಡಲಾಗಿದೆ. ಇದನ್ನೂ ಓದಿ: ನದಿ ಜೋಡಣೆ, ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕು: ಬಸವರಾಜ ಬೊಮ್ಮಾಯಿ
ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭಾಗಿಯಾಗಿದ್ದು, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ರಾಜ್ಯ ಸರ್ಕಾರದ ಅಧಿಕಾರ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಸಭೆಯಲ್ಲಿ ಉಪಸ್ಥಿತರಿದ್ದರು.
ನಿನ್ನೆ ಸಹ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ಹೇಳಲಾಗಿದೆ. ಕರ್ನಾಟಕ್ಕೆ ನ್ಯಾಯ ಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಪ್ರಶ್ನೆಯಾಗಿರುವುದರಿಂದ ಈ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: ತಲೈವಾನ 169ನೇ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್