ಬೆಂಗಳೂರು: ಮಂಡ್ಯ, ಹಾಸನಕ್ಕಷ್ಟೇ ಸಿಎಂ ಕುಮಾರಸ್ವಾಮಿ ಸಿಮೀತ ಎಂಬ ಟೀಕೆಯ ಕೊಂಡಿ ಕಳಚಲು ಯತ್ನಿಸಿದಂತೆ ಇರುವ ಮುಖ್ಯಮಂತ್ರಿಗಳು ಜೂನ್ 21 ರಿಂದ ಗ್ರಾಮ ವಾಸ್ತವ್ಯವನ್ನು ಆರಂಭಿಸುತ್ತಿದ್ದಾರೆ. ತಮ್ಮ ಮೊದಲ ಹಂತದ ಗ್ರಾಮವಾಸ್ತವ್ಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕವನ್ನೇ ಕೇಂದ್ರಿಕರಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ತೀವ್ರ ಹಿನ್ನಡೆಯಿಂದ ಹೊರಬಂದಂತೆ ಇರುವ ಸಿಎಂ ಎಚ್ಡಿಕೆ, ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದ ಯಾದಗಿರಿಯ ಗುರುಮಿಠಕಲ್ ತಾಲೂಕಿನಲ್ಲಿ ಮೊದಲ ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಜೂನ್ 21 ರಂದು ಗುರುಮಿಠಕಲ್ ತಾಲೂಕಿನ ಹಿಂದುಳಿದ ಹಳ್ಳಿಯೊಂದರಲ್ಲಿ ಸಿಎಂ ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಅಂದು ಇಡೀ ದಿನ, ಹಗಲು ರಾತ್ರಿ ಆ ಗ್ರಾಮದ ಜನರ ಕುಂದುಕೊರತೆ ಆಲಿಸಲಿದ್ದಾರೆ.
ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ.
ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ, ಸರ್ಕಾರಿ ಶಾಲೆಗಳಲ್ಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 2, 2019
ಆ ಬಳಿಕ ಜೂನ್ 22ರ ಕಲಬುರಗಿಯ ಅಫಜಲಪುರ ತಾಲೂಕಿನಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಈ ಭಾಗದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿತ್ತು. ಉಳಿದಂತೆ ಜುಲೈ 5 ರಂದು ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲೂಕಿನಲ್ಲಿ ಗ್ರಾಮ ಹಾಗೂ ಜುಲೈ 6ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡಲಿದ್ದಾರೆ.
ಸದ್ಯ ಸಿಎಂ ಅವರು ಯಾವ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂಬುವುದು ಇನ್ನೂ ನಿಗದಿಯಾಗಿಲ್ಲ. ಈ ಕುರಿತು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತೀರ್ಮಾನ ತೆಗೆದುಕೊಂಡು ಗ್ರಾಮಗಳ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಸಿಎಂ ಕುಮಾರಸ್ವಾಮಿ ಅವರಿಗೆ ತಿಳಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ನನ್ನ ಗ್ರಾಮ ವಾಸ್ತವ್ಯ ಯೋಜನೆಯನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ,22ರಂದು ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಪುನರಾರಂಭಿಸುತ್ತಿದ್ದೇನೆ.ಮುಂದಿನ ತಿಂಗಳ ಗ್ರಾಮವಾಸ್ತವ್ಯ ಜುಲೈ5 ಹಾಗೂ 6ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕುಗಳಲ್ಲಿ ಹಮ್ಮಿಕೊಂಡಿದ್ದೇನೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 3, 2019