ಬೆಂಗಳೂರು: ಈಚೆಗಷ್ಟೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಹುಚ್ಚನಿಗೆ ಹೋಲಿಸಿದ್ದ ಪ್ರಕರಣ – ಸಿ ಎಂ ಇಬ್ರಾಹಿಂ ವಿರುದ್ಧ ದೂರು ದಾಖಲು
ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದ್ದರು.
ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ಈ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಉಂಟಾದ ರಾಜಕೀಯ ಪರಿಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮಂತ್ರಾಲಯ ಮಠಕ್ಕೆ ಜಾಗ ಕೊಟ್ಟಿದ್ದು ಸಾಬ್ರು, ಬೇಡ ಅಂದ್ರೆ ಕಿತ್ಕೊಂಡು ಬನ್ನಿ: ಸಿಎಂ ಇಬ್ರಾಹಿಂ
ಅಲ್ಲದೇ ಶೀಘ್ರವೇ ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಜೊತೆ ಕುಳಿತು ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ. ಗೊತ್ತಿಲ್ಲದ ದಾರಿಯಲ್ಲಿ ಹೋಗುವುದಕ್ಕಿಂತ ಗೊತ್ತಿರುವ ದಾರಿಯಲ್ಲಿ ಹೋಗುವುದು ಒಳಿತು ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದರು.