ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಿಎಂ ಕುಮಾರಸ್ವಾಮಿ ಇಂದು ಅಂತಿಮ ಹಂತದ ಚುನಾವಣಾ ಕಾರ್ಯ ಮುಗಿಸಿ ವಿಶ್ರಾಂತಿ ಪಡೆಯಲು ತೆರಳಿದ್ದಾರೆ.
ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್ಡಿಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಎರಡನೇ ಹಂತದ ಮತದಾನ ವೇಳೆ ಮಂಡ್ಯ ಕ್ಷೇತ್ರ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ಸಿಎಂ ಕುಮಾರಸ್ವಾಮಿ ಅವರು ಪ್ರಚಾರ ನಡೆಸಿದ್ದರು. ಅಲ್ಲದೇ 3ನೇ ಹಂತದ ಮತದಾನ ಏ.23 ರಂದು ನಡೆಯುವುದಿಂದ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈ ಅವಧಿಯಲ್ಲಿ ಸಿಎಂ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ನಿರಂತರ ಪ್ರಚಾರದಲ್ಲಿ ತೊಡಗಿದ್ದ ಪರಿಣಾಮ ಸಿಎಂ ಸದ್ಯ ವಿಶ್ರಾಂತಿಯ ಮೊರೆ ಹೋಗಿದ್ದಾರೆ.