ಬೆಂಗಳೂರು/ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ನಿಯೋಗವು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಎರಡು ಡಿಫೆನ್ಸ್ ಕಾರಿಡಾರ್ಗೆ (Defence Corridor) ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರ್ಕಾರವು ಎರಡು ಪ್ರತ್ಯೇಕ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಬೇಕೆಂದು ಕೋರಿ ರಾಜ್ಯ ಸರ್ಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ಸಿಎಂ ಸೇರಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಇಂಧನ ಸಚಿವ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.ಇದನ್ನೂ ಓದಿ: ರಾಮಾಯಣದಲ್ಲಿ ಯಶ್ ಪಾತ್ರ ಬರೀ 15 ನಿಮಿಷ?
2018ರಲ್ಲಿ ಕೇಂದ್ರ ಸರ್ಕಾರವು ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದರೆ, ಇದು ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಕೂಡ ಪೂರಕ ಮಾಹಿತಿ ಒದಗಿಸಿದರು.
ಮುಖ್ಯಮಂತ್ರಿ @siddaramaiah ಅವರು ದೆಹಲಿಯಲ್ಲಿ ರಕ್ಷಣಾ ಸಚಿವರಾದ @rajnathsingh ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.… pic.twitter.com/Ci3wGvOhp8
— Karnataka Congress (@INCKarnataka) July 9, 2025
ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಾದ ಹುಬ್ಬಳ್ಳಿ-ಧಾರವಾಡ-ಬೆಳಗಾವಿ-ವಿಜಯಪುರದಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್, ಏಕಸ್, ಬಿಕಾರ್ ಏರೋಸ್ಪೇಸ್, ವಾಲ್ಚಂದ್ ನಗರ್ ಇಂಡಸ್ಟ್ರೀಸ್ ಮುಂತಾದವು ನೆಲೆಯೂರಿವೆ. ಜೊತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಗಮನಕ್ಕೆ ತಂದರು.
ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರದಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಹೆಚ್ಎಎಲ್, ಕಾಲಿನ್ಸ್ ಏರೋಸ್ಪೇಸ್, ಡೈನಮ್ಯಾಟಿಕ್ ಟೆಕ್ನಾಲಜೀಸ್, ಸೆಂಟಮ್, ಸಾಸ್ಮೋಸ್, ಬೆಲ್ಲಾಟ್ರಿಕ್ಸ್ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್ಎಲ್ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಇದೆ. ಈ ಭಾಗದಲ್ಲಿ ದೇಶದ ಏರ್ಕ್ರಾಫ್ಟ್ ಮತ್ತು ಸ್ಪೇಸ್ಕ್ರಾಫ್ಟ್ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್ ಕಾರಿಡಾರ್ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.
ಮನವಿ ಸ್ವೀಕರಿಸಿದ ರಾಜನಾಥ್ ಸಿಂಗ್, ಈ ಬಗ್ಗೆ ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ