ಬೆಂಗಳೂರು: ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲು ಕಬ್ಬು ಬೆಳೆಗಾರರ ಕ್ಷಮೆ ಕೇಳಿ ಎಂದು ಸಿದ್ದರಾಮಯ್ಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಶಾಸಕ ಯಶವಂತರಾಯಗೌಡ ಪಾಟೀಲರು ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಮಾತನಾಡಿ, ‘ಅವರು ಕಬ್ಬು ಬೆಳೆಗಾರರೇ ಅಲ್ಲ ಎಂದಿದ್ದಾರೆ. ಅವರಿಗೆ ನಾಚಿಕೆ ಆಗಬೇಕು’ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ ಆಗ್ರಹ!
ಕಬ್ಬು ಬೆಳೆಗಾರರಿಗೆ ಅವಮಾನ ಮಾಡಿದ ಅವರು ತಕ್ಷಣ ಕ್ಷಮೆ ಯಾಚಿಸಬೇಕು. ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲಾಗಿ ಕಬ್ಬು ಅರೆಯುವ ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಂಧಾನ ಸಭೆ ಕರೆಯಬೇಕಿತ್ತು. ತಡ ಆಗಿದೆ. ತಡ ಆಗಿದ್ದರೂ ಪರವಾಗಿಲ್ಲ. ರೈತರ ತಾಳ್ಮೆ ಪರೀಕ್ಷಿಸದಿರಿ. ಪ್ರಧಾನಿಯವರಿಗೆ ಪತ್ರ ಬರೆಯವುದಾಗಿ ಕೈಕಟ್ಟಿ ಸುಮ್ಮನೆ ಕುಳಿತಿರದಿರಿ ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ಕುರ್ಚಿಗೆ ಎಷ್ಟು ತಲೆ ಕೆಡಿಸಿಕೊಂಡಿದ್ದೀರೋ ಅದರ ಶೇ.10 ರಷ್ಟನ್ನು ಕಬ್ಬು ಬೆಳೆಗಾರರ ಬಗ್ಗೆ ತಲೆ ಕೆಡಿಸಿಕೊಳ್ಳಿ. ಆಗ ರೈತರು ನಿಮ್ಮನ್ನು ಪೂಜೆ ಮಾಡುತ್ತಾರೆ. ನನಗೆ ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಖಂಡಿತ ಇಲ್ಲ ಎಂದು ನುಡಿದರು. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವುದಷ್ಟೇ ನಮ್ಮ ಬದ್ಧತೆ ಎಂದರು. ಇದನ್ನೂ ಓದಿ: ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ ಸಿದ್ದರಾಮಯ್ಯ – ಕೇಂದ್ರ ನೆರವಿಗೆ ಬರುವಂತೆ ಮೋದಿಗೆ ಪತ್ರ
ಮುಖ್ಯಮಂತ್ರಿಗಳ ಆಲಸ್ಯ, ಅಸಡ್ಡೆ. ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರಬಾರದಿತ್ತು. ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿಗಳು ಆಲಸ್ಯ ಮಾಡಿದ್ದಾರೆ. ಅಸಡ್ಡೆ ತೋರಿದ್ದಾರೆ. ಈಗ ಹೋರಾಟ ತೀವ್ರಗೊಂಡಿದೆ. ಬೀದಿಗಿಳಿದು ಪ್ರತಿಭಟನೆ ನಡೆಯುತ್ತಿದೆ. ಈಗ ನೀವು ಪ್ರಧಾನಿಯವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ಮೇಲೆ ದೂರುವ ಪ್ರಯತ್ನ ಮಾಡುತ್ತೀರಾ ಎಂದು ವಿಜಯೇಂದ್ರ ಪ್ರಶ್ನಿಸಿದರು.
ಎಫ್ಆರ್ಪಿಯನ್ನು ಪ್ರಧಾನಿಯವರೊಬ್ಬರೇ ತೀರ್ಮಾನ ಮಾಡುವುದಿಲ್ಲ. ಎಲ್ಲ ರಾಜ್ಯಗಳ ಅಧಿಕಾರಿಗಳು, ತಜ್ಞರ ಅಭಿಪ್ರಾಯ ಪಡೆದು ಇದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಎಷ್ಟೇ ಎಫ್ಆರ್ಪಿ ನಿಗದಿ ಮಾಡಿದರೂ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಹೆಚ್ಚು ದರ ಕೊಡಲು ಅವಕಾಶವಿದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಮಾನವೀಯತೆ ದೃಷ್ಟಿಯಿಂದ ಯೋಚಿಸಬೇಕು ಎಂದು ಒತ್ತಾಯಿಸಿದರು.


