ಬೆಂಗಳೂರು: ಮುಡಾ ಅವ್ಯವಸ್ಥೆ (MUDA), ಅಕ್ರಮದ ಬಗ್ಗೆ ಎಲ್ಲಾ ಪಕ್ಷದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ.
ಮೈಸೂರು ಜಿಲ್ಲೆ ಅಭಿವೃದ್ಧಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಶುಕ್ರವಾರ) ಸಭೆ ನಡೆಯಿತು. ಈ ವೇಳೆ, ಮೈಸೂರಿನ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಸಿಎಂ ಗಮನಕ್ಕೆ ತಂದರು. ಈ ವೇಳೆ ಮಾತನಾಡಿದ ಸಿಎಂ, ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕೆ ಹೀಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಎಲ್ಲಾ ಪಕ್ಷದ ಶಾಸಕರ ಮೇಲೆ ಸಿಎಂ ಅಸಮಾಧಾನ ಹೊರಹಾಕಿದ್ದಾರೆ.
ಹೊಸ ಬಡಾವಣೆ ಮಾಡುವಾಗ ವಿದ್ಯುತ್ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಮೈಸೂರು ವಿಮಾನ ನಿಲ್ದಾಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಯ್ತು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ.
ವಿಮಾನ ನಿಲ್ದಾಣದ ವಿಚಾರವಾಗಿ, ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಕೇಂದ್ರ ವಿಮಾನಯಾನ ಸಚಿವರನ್ನು ಜ.15 ರಂದು ಭೇಟಿಯಾಗಿ ಮಾತುಕತೆ ನಡೆಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
– ಸಿಎಂ ಸಭೆಯ ಹೈಲೈಟ್ಸ್
>.ಶಿಥಿಲಗೊಂಡಿರುವ ಲಾನ್ಸ್ಡೌನ್ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು.ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು.
>.ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.
>.ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.
>.ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ.ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚನೆ.
>.ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚನೆ.
>.ಅಂಬೇಡ್ಕರ್ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ.
>.ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ.
>.ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ.
>.ಐಟಿ ಪಾರ್ಕ್ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
>.ಫಿಲ್ಮ್ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು.
>.ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ ಅಂತ ಸಿಎಂಗೆ ಅಧಿಕಾರಿಗಳು ಮಾಹಿತಿ ನೀಡಿದ್ರು.
>.ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ.
>.ಯೋಜನೆಯಡಿ ಇನ್ನೂ 46 ಎಕ್ರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕ್ರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ.
>.ಇನ್ನೂ 95 ಎಕ್ರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ಬಗ್ಗೆ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ರು.
 

 
		 
		 
		 
		 
		
 
		 
		 
		 
		