ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ತರುವಲ್ಲಿ ವಿಫಲವಾಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದಾರೆ ಅಂತಾ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗದ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿದ್ದಾರೆ ಅಂತಾ ಹೇಳಲಾಗುತ್ತಿದೆ. ಸರ್ಕಾರ 5 ವರ್ಷ ಉತ್ತಮ ಆಡಳಿತ ನೀಡಿದ್ರೂ, ಜನರ ಬೆಂಬಲ ಸಿಗಲಿಲ್ಲ ಅಂತಾ ದುಃಖದಿಂದ ಅತ್ತಿದ್ದಾರೆ. ಈ ವೇಳೆ ಸಿಎಂ ಜೊತೆ ಎಂಎಲ್ಸಿ ಸೇರಿ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.
ಸಚಿವ ರಾಮಲಿಂಗಾ ರೆಡ್ಡಿ ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ, ಶಾಸಕಾಂಗದ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿಲ್ಲ ಅಂತಾ ಸ್ಪಷ್ಟಪಡಿಸಿದ್ರು. ಬಿಜೆಪಿಯವರು ನಮ್ಮ ಕೆಲ ಶಾಸಕರನ್ನು ಸಂಪರ್ಕ ಮಾಡಿದ್ದಾರೆ. ಆದ್ರೆ ಯಾವ ಶಾಸಕರು ಬಿಜೆಪಿಗೆ ಬೆಂಬಲ ನೀಡಲ್ಲ. ಇನ್ನೂ ಕೆಲವು ಶಾಸಕರು ಮಾರ್ಗ ಮಧ್ಯೆದಲ್ಲಿದ್ದು, ಆದಷ್ಟು ಬೇಗ ಬೆಂಗಳೂರಿಗೆ ಬರುತ್ತಿದ್ದಾರೆ ಅಂತಾ ಹೇಳಿದ್ರು.
ಈಗಾಗಲೇ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.