ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ಭೇಟಿಯಾಗಿದ್ದಾರೆ.
ಬೈ ಎಲೆಕ್ಷನ್ ನಲ್ಲಿ ಭರ್ಜರಿ ಗೆಲುವು ಸಾಧಿಸಿಕೊಂಡ ನಂತರ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿಎಂ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ಗೆದ್ದಿರೋ 11 ಶಾಸಕರಿಗೆ ಸಚಿವ ಸ್ಥಾನ ಕೊಡ್ತೀನಿ ಅಂತ ಸಿಎಂ ಘೋಷಣೆ ಮಾಡಿದ್ದಾರೆ. ಆದರೆ ಯಾರಿಗೆ ಯಾವ ಸ್ಥಾನ ನೀಡಬೇಕು ಅಂತ ಸಿಎಂ ಫುಲ್ ಗೊಂದಲದಲ್ಲಿ ಇದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ.
ಈ ಮಧ್ಯೆ ಸಂಪುಟ ವಿಸ್ತರಣೆ ಕಸರತ್ತಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಎಂಟ್ರಿ ಕೊಟ್ಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಸಿಎಂ ಯಡಿಯೂರಪ್ಪ ಅವರ ಜೊತೆ ಮಾತುಕತೆ ಮಾಡಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮಹತ್ವದ ಚರ್ಚೆ ಮಾಡಿದ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಾರು ಯಾರಿಗೆ ಯಾವ ಖಾತೆ ಕೊಡಬೇಕು. ಡಿಸಿಎಂ ಹುದ್ದೆ ಸೃಷ್ಟಿ, ಮೂಲ ಬಿಜೆಪಿಗರಿಗೆ ಸ್ಥಾನ ನೀಡುವ ಕುರಿತು ಸಿಎಂ ಜೊತೆ ಸಂತೋಷ್ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ಸಿಎಂ ಯಡಿಯೂರಪ್ಪ ಜೊತೆ ಮಾತುಕತೆ ಮಾಡಿರುವ ಸಂತೋಷ್ ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದಾರೆ. ಮುಂದಿನ ವಾರ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ಬಹುತೇಕ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಡೋ ಸಾಧ್ಯತೆ ಇದೆ. ಅಂದುಕೊಂಡಂತೆ ಎಲ್ಲವೂ ನಡೆದರೆ 15 ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ. ಮಿಸ್ ಆದರೆ ಸಂಕ್ರಾಂತಿ ಬಳಿಕವೇ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಗಳಿದೆ.