ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.
ಜೆಡಿಎಸ್ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಎಂಬವರು ಸುಮಲತಾ ವಿರುದ್ಧ ದೂರು ನೀಡಿದ್ದಾರೆ. ಸುಮಲತಾ ನಟಿಸಿರುವ ಜಾಹೀರಾತು ಟಿ.ವಿಗಳಲ್ಲಿ ಪ್ರಸಾರವಾಗುತ್ತಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಹೀಗಾಗಿ ಅವರ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳ ಬಳಿಕ ಮನವಿ ಮಾಡಿಕೊಂಡಿದ್ದಾರೆ.
ದೂರಿನಲ್ಲಿ ಏನಿದೆ?
ಲೋಕಸಭಾ ಚುನಾವಣೆಯು ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 18 ಹಾಗೂ 23 ರಂದು ಎರಡು ಹಂತದಲ್ಲಿ ಜರುಗಲಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎ.ಸುಮಲತಾ ಅವರು ನಟಿಸಿರುವ ಜಾಹಿರಾತು ಹಲವು ಖಾಸಗಿ ಟಿ.ವಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.
ಇದರ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಿಸುತ್ತಿರುವುದರಿಂದ ಇದು ಪರೋಕ್ಷವಾಗಿ ಪ್ರತಿ ಸ್ಪರ್ಧಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಇದರ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜನತಾದಳ ಪಕ್ಷದ ಪರವಾಗಿ ಕೋರುತ್ತಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.