ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುಗಮ ಸಂಚಾರಕ್ಕಾಗಿ ಮಂಡ್ಯದಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆಯಲಾಗಿದೆ.
ಅಕ್ಟೋಬರ್ 29ರಂದು ಒಳನಾಡು ಮೀನುಗಾರರ ರಾಜ್ಯಮಟ್ಟದ ಸಮಾವೇಶಕ್ಕೆಂದು ಸಿಎಂ ಸಿದ್ದರಾಮಯ್ಯ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ ಮೈದಾನದಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸುವುದರಿಂದ ಅವರ ಸುಗಮ ಸಂಚಾರಕ್ಕೆ ಜಿಲ್ಲಾಡಳಿತ ಕಾಲೇಜಿನ ಕಾಂಪೌಂಡ್ ಗೋಡೆಯನ್ನು ಒಡೆದು ಹಾಕಿದೆ.
ಕಳೆದ ಸೆಪ್ಟೆಂಬರ್ 8ರಂದು ಇದೇ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆಂದು ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆಯೂ ಕಾಲೇಜಿನ ಎರಡು ಕಡೆ ಕಾಂಪೌಂಡ್ ಗೋಡೆಯನ್ನು ಧ್ವಂಸ ಮಾಡಲಾಗಿತ್ತು. ಜಿಲ್ಲಾಡಳಿತದ ಈ ಕ್ರಮದ ವಿರುದ್ಧ ಅಂದು ಸಾಕಷ್ಟು ಟೀಕೆ ಕೂಡ ವ್ಯಕ್ತವಾಗಿತ್ತು.
ಇಪ್ಪತ್ತು ದಿನಗಳ ಹಿಂದೆಯಷ್ಟೇ ಧ್ವಂಸಗೊಳಿಸಲಾಗಿದ್ದ ಕಾಂಪೌಂಡ್ ಗೋಡೆಯನ್ನು ಹೊಸದಾಗಿ ನಿರ್ಮಿಸಲಾಗಿತ್ತು. ಆದರೆ ಇದೀಗ ಮತ್ತೆ ಎರಡು ಕಡೆ ಕಾಂಪೌಂಡ್ ಒಡೆದು ಹಾಕಿರೋದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಜಿಲ್ಲಾಡಳಿತದ ಧೋರಣೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿ ಸಾರ್ವಜನಿಕ ತೆರಿಗೆ ಹಣವನ್ನು ದುಂದು ವೆಚ್ಚ ಮಾಡುವ ಬದಲು ಸಿಎಂ ಸಿದ್ದರಾಮಯ್ಯನವರು ಮಂಡ್ಯಕ್ಕೆ ಬರುವುದೇ ಬೇಡ ಎಂಬ ಅಭಿಪ್ರಾಯವು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.