ಬೀದರ್: ನಗರದ ನೆಹರು ಸ್ಟೇಡಿಯಂ ಬಳಿ ಬರೋಬ್ಬರಿ 3 ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮೀಣ ಭಾಗದ ಬಡ ಕ್ರೀಡಾಪಟು ಮಕ್ಕಳಿಗಾಗಿ ಎರಡು ಅಂತಸ್ತಿನ ಬೃಹತ್ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಕಳಪೆ ಕಾಮಗಾರಿಯಿಂದಾಗಿ ಸರ್ಕಾರದ ಹಣ ಗೋಲ್ಮಾಲ್ ಆಗ್ತಿದೆಯಾ ಎಂಬ ಅನುಮಾನ ಮೂಡಿದೆ.
ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡದ ಮೇಲ್ಚಾವಣಿ, ಶೌಚಾಲಯ, ಬಾಗಿಲು ಸೇರಿದಂತೆ ಹಲವು ಭಾಗಗಳಲ್ಲಿ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ. ಕೋಟ್ಯಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ ಈ ರೀತಿ ಕಳಪೆ ಕಾಮಗಾರಿ ಮಾಡಿರುವುದು ಹೇಗೆ ಎಂಬ ಪ್ರಶ್ನೆ ಮೂಡಿದೆ.
ಮೇಲ್ಚಾವಣಿಗೆ ತೆರಳಿ ಪರೀಶಿಲಿಸಿದಾಗ ಹಾಕಿರುವ ಸಿಮೆಂಟ್ ಕಾಂಕ್ರೀಟ್ ಕಿತ್ತುಬರುತ್ತಿರುವುದು ಕಂಡುಬಂದಿದೆ. ಇದರಿಂದ ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನ ಮೂಡಿದೆ.
ಪ್ರಮುಖವಾಗಿ ಗ್ರಾಮೀಣ ಭಾಗದ ನೂರಾರು ಕ್ರೀಡಾಪಟು ಮಕ್ಕಳಿಗಾಗಿ ನಿರ್ಮಾಣ ಮಾಡುತ್ತಿರುವ ಈ ಬೃಹತ್ ಎರಡು ಅಂತಸ್ತಿನ ಕಟ್ಟಡ ಇನ್ನೂ ಉದ್ಘಾಟನೆಯಾಗಿಲ್ಲ. ಆದರೆ, ಉದ್ಘಾಟನೆಗೂ ಮುನ್ನವೇ ಕಳಪೆ ಕಾಮಗಾರಿಯ ಆರೋಪ ಕೇಳಿಬಂದಿದೆ.
ಬಡ ಕ್ರೀಡಾಪಟು ಮಕ್ಕಳಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾ ಇಲಾಖೆಯ ವಸತಿ ನಿಲಯದ ಕಾಮಗಾರಿ ಅತ್ಯಂತ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈಗಾಗಲೇ ಈ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯಾಗಿ, ಬಡ ಕ್ರೀಡಾಪಟು ಮಕ್ಕಳು ಇಲ್ಲಿ ವಾಸ ಮಾಡಬೇಕಿತ್ತು. ಆದರೆ, ಕ್ರೀಡಾ ಇಲಾಖೆ, ಜಿಲ್ಲಾಡಳಿತ ಹಾಗೂ ಸಚಿವರ ನಿರ್ಲಕ್ಷ್ಯದಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಇದನ್ನೂ ಓದಿ: ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ
ಮಂದಗತಿಯಲ್ಲಿ ಕಾಮಗಾರಿ ನಡೆಸುತ್ತಿದ್ದು, ಸರ್ಕಾರದ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲೇ ಕುಳಿತು ಗುತ್ತಿಗೆದಾರರು ಈ ರೀತಿಯ ಕಳಪೆ ಮಟ್ಟದ ವಸತಿ ನಿಲಯ ನಿರ್ಮಾಣ ಮಾಡುತ್ತಿದ್ದರೂ, ಇದಕ್ಕೆ ಬ್ರೇಕ್ ಹಾಕುವ ಕೆಲಸ ನಡೆಯುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತ ಮುಂಭಾಗದಲ್ಲೇ ಇರುವ ಕ್ರೀಡಾ ಇಲಾಖೆ ಅಧಿಕಾರಿಗಳು ಕೂಡ ಇದನ್ನು ಗಮನಿಸದೆ, ನಮಗೆ ಏನೂ ಗೊತ್ತಿಲ್ಲ ಎಂಬಂತೆ ತೇಪೆ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಗುತ್ತಿಗೆದಾರರು ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಪರಸ್ಪರ ಶಾಮೀಲಾಗಿರುವ ಪರಿಣಾಮ ವಸತಿ ನಿಲಯದ ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರನ್ನು ಕೇಳಿದಾಗ, ನೀವು ಹೇಳಿರುವ ಕಳಪೆ ಕಾಮಗಾರಿ ಬಗ್ಗೆ ತನಿಖೆ ಮಾಡಿಸುತ್ತೇನೆ. ವರದಿ ಬಂದ ಬಳಿಕ ಯಾರು ವಸತಿ ನಿಲಯದ ಕಾಮಗಾರಿಯನ್ನು ಕಳಪೆ ಮಾಡಿದ್ದಾರೆ ಎಂಬುದು ಗೊತ್ತಾದರೆ, ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.ಇದನ್ನೂ ಓದಿ: BRICS | ʻಹಾರ್ಮುಜ್ʼ ಬಗ್ಗೆ ಮೋದಿ ಕಳವಳ – ಸಮುದ್ರ ಮಾರ್ಗಗಳು ಸುರಕ್ಷಿತವಾಗಿದ್ರೆ ಮಾತ್ರ ಜಾಗತಿಕ ವ್ಯಾಪಾರ ಸಾಧ್ಯ: ಮೋದಿ

