ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಬಜೆಟ್ಗೆ ಶಾಸಕ ಸುಧಾಕರ್ ಹಾಗೂ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರ ಬೆನ್ನಲ್ಲೆ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್,ಕೆ.ಪಾಟೀಲ್ ಅವರು ಕೂಡ ಅಸಮಾಧಾನ ಹೊರಹಾಕಿದ್ದಾರೆ.
ಎಚ್.ಕೆ.ಪಾಟೀಲ್ ಅವರು ಸದ್ಯ ಸಿ.ಎಂ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಜಿ. ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾಮುಖ್ಯತೆ ನೀಡದೇ ಅನ್ಯಾಯ ಮಾಡಲಾಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಹೊಸ ಯೋಜನೆಗಳನ್ನು ರೂಪಿಸುವುದು ಸೂಕ್ತ. ಹೀಗಾಗಿ ಸಮನ್ವಯ ಸಮಿತಿ ತುರ್ತು ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.
2018ರ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳ ಗೆಲುವಿಗೆ ಕಾರಣೀಕರ್ತರಾದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಯಾವುದೇ ಹೊಸ ಕಾರ್ಯಕ್ರಮವನ್ನು ಘೋಷಿಸಿಲ್ಲ. ಅಲ್ಲದೇ ಹೊಸ ತಾಲೂಕುಗಳಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಬಜೆಟ್ನಲ್ಲಿ ಪ್ರಸ್ತಾಪಿಸಿಲ್ಲ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ದಿಟ್ಟ ನಿರ್ಧಾರದಿಂದ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಜಾತ್ಯತೀತ ಪಕ್ಷಗಳ ಒಗ್ಗೂಡಿಕೆಯು ರಾಷ್ಟ್ರದಲ್ಲಿ ಹೊಸ ರಾಜಕೀಯ ದಿಕ್ಸೂಚಿಗೆ ಕಾರಣವಾಗಿದೆ. ಹೀಗಾಗಿ ಪ್ರಾದೇಶಿಕ ಅಸಮತೋಲನ ನಿವಾರಣೆ ಆಗಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.