ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಅತೃಪ್ತ ಶಾಸಕರ ವಿರುದ್ಧ 400 ಕಾಂಗ್ರೆಸ್ ಕಾರ್ಯಕರ್ತರು ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಅನಿಲ್ ಚಾಕು ಅವರ ನೇತೃತ್ವದಲ್ಲಿ 400 ಜನ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ದೂರನ್ನು ನೀಡಿದ್ದಾರೆ. ಈ ಮೂಲಕ ಅತೃಪ್ತ ಶಾಸಕರ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಶಾಸಕರು ರಾಜೀನಾಮೆ ಕೊಟ್ಟಿರುವ ಕಾರಣದಿಂದಲೇ ಅನರ್ಹತೆ ಮಾಡಿ. ಶಾಸಕರು ಖರೀದಿಗೆ ಒಳಗಾಗಿ ರಾಜೀನಾಮೆ ನೀಡಿದ್ದಾರೆ. ಅತೃಪ್ತ ಶಾಸಕರು ಒತ್ತಡಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರು ಸಲ್ಲಿಸಿರುವ ಅರ್ಜಿಯನ್ನು ವಜಾಮಾಡುವಂತೆ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ದೂರನ್ನು ಸ್ವೀಕರಿಸದ ಸುಪ್ರೀಂ ಕೋರ್ಟ್ ಮಧ್ಯಂತರ ಅರ್ಜಿಯನ್ನು ಸಲ್ಲಿಸಲು ಸೂಚನೆ ನೀಡಿದೆ.