ಬಾಗಲಕೋಟೆ: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ಜಯಗಳಿಸಿದ್ದಾರೆ.
ಆನಂದ್ ನ್ಯಾಮಗೌಡ 97,017 ಮತಗಳನ್ನು ಪಡೆದುಕೊಂಡು 39,480 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಂಠ ಸುಬ್ಬರಾವ್ ಒಟ್ಟು 57,537 ಮತಗಳನ್ನು ಪಡೆದುಕೊಂಡಿದ್ದಾರೆ.
ಶಾಸಕ ಸಿದ್ದು ನ್ಯಾಮಗೌಡರ ಅಕಾಲಿಕ ಮರಣದಿಂದಾಗಿ ಜಮಖಂಡಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿತ್ತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದು ನ್ಯಾಮಗೌಡರ ಪುತ್ರ ಆನಂದ ಸಿದ್ದು ನ್ಯಾಮಗೌಡ ಸ್ಪರ್ಧಿಸಿದ್ದರೆ, ಕಳೆದ ಬಾರಿ ಕಡಿಮೆ ಅಂತರದಿಂದ ಪರಾಜಯಗೊಂಡಿದ್ದ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಂಠ ಸುಬ್ಬರಾವ್ ಮತ್ತೊಮ್ಮೆ ಅಖಾಡಕ್ಕೆ ಧುಮುಕಿದ್ದರು.
ಈ ಬಾರಿಯ ಜಮಖಂಡಿ ಉಪ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಅನುಕಂಪದ ಆಧಾರದ ಮೇಲೆ ಜಯಗಳಿಸುತ್ತಾರೆ ಎನ್ನುತ್ತಿದ್ದರೆ, ಬಿಜೆಪಿ ಅಭ್ಯರ್ಥಿ ಕಳೆದ ಬಾರಿ ಕಡಿಮೆ ಅಂತರದಿಂದ ಸೋಲನ್ನು ಕಂಡಿದ್ದರು. ಅವರಿಗೆ ಮತದಾರ ಒಲವು ತೋರುತ್ತಾರೆ ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬಂದಿದ್ದವು. ಆದರೆ ಇಂದಿನ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್ಸಿಗೆ ಗೆಲುವನ್ನು ತಂದುಕೊಟ್ಟಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv