ಬೆಂಗಳೂರು: ದೇಶದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ರಾಜ್ಯದ ನಾಯಕರನ್ನು ಉಸ್ತುವಾರಿಗಳನ್ನಾಗಿ ನಿಯೋಜಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.
ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರಾಂ ಮತ್ತು ಛತ್ತೀಸ್ಗಡ ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯ ಸಾಧಿಸಲು ರಾಜ್ಯದ ಪ್ರಮುಖ ನಾಯಕರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲು ಹೈಕಮಾಂಡ್ ಪ್ಲಾನ್ ಮಾಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ರಾಜ್ಯದ ದಲಿತ ಮುಖಂಡ ಹಾಗೂ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಹಿಂದುಳಿದ ವರ್ಗಗಳ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣೆ ನಿರ್ವಹಣೆಕಾರ ಎಂದೇ ಹೆಸರು ಪಡೆದಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರನ್ನು ಆಯಾ ರಾಜ್ಯಗಳ ಉಸ್ತುವಾರಿಗಳನ್ನಾಗಿ ನೇಮಿಸಲು ಹೈಕಮಾಂಡ್ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ನಡೆಸಿದ್ದು, ಶೀಘ್ರವೇ ರಾಜ್ಯಗಳನ್ನು ಹಂಚಿಕೆ ಮಾಡಿ ಉಸ್ತುವಾರಿ ವಹಿಸಲಿದೆ. ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಚುನಾವಣೆಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಅಲ್ಲದೇ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ಸಿಗೆ ಹೆಚ್ಚಿನ ಪೂರಕ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಚುನಾವಣೆಯಲ್ಲಿ ಪ್ರಚಾರ ಸೇರಿದಂತೆ ನಿರ್ವಹಣೆಗೆ ರಾಜ್ಯದ ನಾಯಕರನ್ನು ಬಳಸಿಕೊಂಡು, ಅಧಿಕಾರ ಸ್ಥಾಪಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews