ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಿದ್ದ ಕಾಂಗ್ರೆಸ್ ನಾಯಕರು, ಇಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಜೊತೆಗೆ ಸದನದಲ್ಲಿ ಚರ್ಚೆಗೆ ಅವಕಾಶ ಮಾಡಿ ಕೊಡದ ಸ್ಪೀಕರ್ ವಿರುದ್ಧವೂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ನಿಯೋಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿರುದ್ಧ ರಾಜ್ಯಪಾಲ ವಿ.ಆರ್.ವಾಲಾಗೆ ದೂರು ಸಲ್ಲಿಸಿತು.
ಸದನದ ಕಲಾಪದ ವೇಳೆ ಸ್ಪೀಕರ್ ವಿಪಕ್ಷಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ವಿಧಾನಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಸಂವಿಧಾನದ 175ನೇ ಪರಿಚ್ಛೇದಡಿ ಸ್ಪೀಕರ್ ಗೆ ನಿರ್ದೇಶನ ನೀಡಲು ಘನತೆವೆತ್ತ ರಾಜ್ಯಪಾಲರಿಗೆ ಅಧಿಕಾರವಿದೆ. ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸ್ಪೀಕರ್ ಗೆ ನಿರ್ದೇಶನ ನೀಡಬೇಕು. ಶಾಸಕ ಯತ್ನಾಳ್ ಹೇಳಿಕೆ ವಿರುದ್ಧ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ದೂರು ಸಲ್ಲಿಕೆ ಮಾಡಿತು. ಅಲ್ಲದೆ ಯತ್ನಾಳ್ ವಿರುದ್ಧವು ದೂರು ಸಲ್ಲಿಕೆ ಮಾಡಿ ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಸ್ಪೀಕರ್ ಹಾಗೂ ಯತ್ನಾಳ್ ಇಬ್ಬರೂ ಸಂವಿಧಾನಕ್ಕೆ ವಿರೋದ್ಧವಾಗಿ ನೆಡೆದುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಉತ್ತರಿಸಿರುವ ರಾಜ್ಯಪಾಲರು, ಸಂವಿಧಾನದ ನಿಯಮಗಳನ್ನು ನೋಡಿ ಪರಿಶೀಲನೆ ಮಾಡುತ್ತೇನೆ ಎಂದು ಕಾಂಗ್ರೆಸ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ.