ಹುಬ್ಬಳಿ: ಆಪಾದನೆ ಮಾಡುವವರು ಮೊದಲು ಶುದ್ಧಹಸ್ತರಿರಬೇಕು. ಆವಾಗ ಮಾತ್ರ ಅದಕ್ಕೆ ಬೆಲೆ ಬರುತ್ತದೆ. ಕಾಂಗ್ರೆಸ್ನವರು (Congress) ದಿಂಬು ಹಾಸಿಗೆಯನ್ನೂ ಬಿಟ್ಟಿಲ್ಲ. ಬಿಸ್ಕೆಟ್, ಕಾಫಿಯಲ್ಲೂ ಭ್ರಷ್ಟಾಚಾರ (Corruption) ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.
ಹುಬ್ಬಳಿಯಲ್ಲಿ (Hubballi) ಮಾತನಾಡಿದ ಅವರು, ಕಾಂಗ್ರೆಸ್ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡಿದೆ. ಎಂಬಿ ಪಾಟೀಲ್, ಜಾರ್ಜ್, ಮಹದೇವಪ್ಪರಿಗೆ ಕೇಳಬೇಕು, ಸಿದ್ದರಾಮಯ್ಯ ಇಷ್ಟೆಲ್ಲಾ ಟಾರ್ಗೆಟ್ ಕೊಟ್ಟಿದ್ದರು ಎಂದು. ಭ್ರಷ್ಟಾಚಾರದ ಕೂಪದಲ್ಲಿ ಇರುವವರು ಆಪಾದನೆ ಮಾಡಿದರೆ ನಡೆಯಲ್ಲ. ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ. ಹೀಗಾಗಿ ರಾಜ್ಯ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ ಎರಡಾ? ಎಂದು ಸಿಎಂ ಪ್ರಶ್ನೆ ಮಾಡಿದರು.
ಬಂದ್ ಮೂಲಕ ತಮ್ಮ ರಾಜಕೀಯ ಭವಿಷ್ಯ ಬರೆದುಕೊಳ್ಳಬಹುದು ಅನ್ನೋದು ಮೂರ್ಖತನ. ಚುನಾವಣಾ ಅಖಾಡವಿದೆ, ಜನರೇ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ನ ಕೈ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿ ಜನ ಈ ಬಂದ್ ಕರೆಗೆ ಬೆಂಬಲ ನೀಡುವುದಿಲ್ಲ ಎಂದರು. ಇದನ್ನೂ ಓದಿ: ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸುಧಾಕರ್
ಬೆಳಗಾವಿ ರಾಜಹಂಸಗಡದಲ್ಲಿ ಕಾಂಗ್ರೆಸ್ನಿಂದ ಶಿವಾಜಿ ಪ್ರತಿಮೆ ಮರು ಉದ್ಘಾಟನೆ ಇದೊಂದು ಹಾಸ್ಯಾಸ್ಪದ ಸಂಗತಿ. ಸರ್ಕಾರವೇ ಬಂದು ಮೂರ್ತಿ ಉದ್ಘಾಟನೆ ಮಾಡಿದ ಮೇಲೆ ಈ ರೀತಿ ಮಾಡೋದು ಸರಿಯಲ್ಲ. ಸರ್ಕಾರದಿಂದ ಉದ್ಘಾಟನೆ ಮಾಡಿದ ನಂತರ ಒಣ ಪ್ರತಿಷ್ಠೆಗಾಗಿ ಈ ರೀತಿ ಮಾಡಲಾಗಿದೆ. ರಾಷ್ಟ್ರನಾಯಕರ ಹೆಸರಲ್ಲಿ ಈ ರೀತಿ ರಾಜಕೀಯ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದರು.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಐಎಸ್ಕೆಪಿ ಹೊಣೆಹೊತ್ತ ವಿಚಾರವಾಗಿ ಮಾತನಾಡಿದ ಅವರು, ಈಗ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ ಕೇಳಬೇಕು. ಬರೀ ಸಾಧಾರಣ ಕುಕ್ಕರ್ ಎಂದು ಡಿಕೆಶಿ ಹೇಳಿದ್ದರು. ಬಿಜೆಪಿಯವರು ಇದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದರು. ಈಗ ಈ ವಿಚಾರಕ್ಕೆ ಡಿಕೆಶಿ ಏನು ಹೇಳ್ತಾರೆ ಪ್ರಶ್ನೆ ಕೇಳಿ ಎಂದು ಸಿಎಂ ಮಾಧ್ಯಮಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ