ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವು ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ. ಯಾವಾಗ ಬೇಕಾದರೂ ಒಡೆದು ಹೋಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸಮ್ಮಿಶ್ರ ಸರ್ಕಾರವು ಜನಾದೇಶದ ವಿರುದ್ಧವಾಗಿ ಅಸ್ತಿತ್ವಕ್ಕೆ ಬಂದಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಧಿಕಾರವನ್ನು ಹಿಡಿಯಲೇ ಬೇಕೇಂಬ ತರಾತುರಿಯಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚನೆಮಾಡಿಕೊಂಡಿವೆ. ಇದರಿಂದಾಗಿ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೇ ಕಿತ್ತಾಟ ನಡೆಸುತ್ತಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಹೀಗಾಗಿ ಇವರ ಸರ್ಕಾರವು ನೀರಿನ ಮೇಲೆ ಗುಳ್ಳೆ ಇದ್ದಹಾಗೆ ಇದೆ. ಎನಿ ಟೈಮ್ ಬೇಕಾದರೂ ಪತನವಾಗಬಹುದು ಎಂದು ವ್ಯಂಗ್ಯವಾಡಿದರು.
ಸಿಎಂ ಕುಮಾರಸ್ವಾಮಿಯವರ ಕಿಂಗ್ಪಿನ್ ವಿಚಾರಕ್ಕೆ ಕಿಡಿಕಾರಿದ ಅವರು, ನಿಮ್ಮ ಬಳಿ ಸಾಕ್ಷಿ ಇದ್ದರೆ ಸೂಕ್ತ ಕ್ರಮ ಕೈಗೊಳ್ಳಿ. ಅದನ್ನು ಬಿಟ್ಟು ಈ ರೀತಿ ಹೇಳಿಕೆ ನೀಡಬೇಡಿ. ಅವರು ಹಿಂದಿನಿಂದಲೂ ಇದೇ ರೀತಿ ಮಾಡಿಕೊಂಡು ಬರುತ್ತಿದ್ದಾರೆ. ಬಿಜೆಪಿಯು ಯಾವುದೇ ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ. ನಿಮಗೇನಾದರೂ ಗಟ್ಸ್ ಇದ್ದರೆ, ನಿಮ್ಮ ಶಾಸಕರನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ. ಅದನ್ನು ಬಿಟ್ಟು ನಮ್ಮ ಮೇಲೆ ಸುಖಾಸುಮ್ಮನೆ ಆರೋಪ ಮಾಡಬೇಡಿ. ಒಂದು ವೇಳೆ ಸರ್ಕಾರ ಬಿದ್ದರೆ, ಸಹಜವಾಗೆ ನಾವು ಅದರ ಉಪಯೋಗ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv