ಬೆಂಗಳೂರು: ವಿಧಾನಸಭಾ ಚುನಾವಣೆಯ ಅಧಿಕಾರಕ್ಕೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ.
ನಗರದ ಅಶೋಕ್ ಹೋಟೆಲ್ನಲ್ಲಿ ಸಿಎಂ ಎಚ್ಡಿ ಕುಮಾರಸ್ವಾಮಿ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೇಣುಗೋಪಾಲ್, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಯಲ್ಲಿ ಸ್ಪರ್ಧೆ ಮಾಡಲಿದೆ. ಆದರೆ ಮೈತ್ರಿಯ ಕುರಿತು ಮುಂದಿನ ದಿನಗಳಲ್ಲಿ ಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಸರ್ಕಾರ ಸಂಪುಟ ರಚನೆ ಕುರಿತು ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎರಡು ಪಕ್ಷಗಳು ಸಮ್ಮಿಶ್ರ ಸರ್ಕಾರ ಅಡಿ ಕಾರ್ಯ ನಿರ್ವಹಿಸುತ್ತದೆ. ಸಂಪುಟ ರಚನೆ ಎರಡು ಪಕ್ಷದ ನಾಯಕರು ಒಮ್ಮತದ ತೀರ್ಮಾನ ಕೈಗೊಂಡಿದ್ದು, ರಾಹುಲ್ ಗಾಂಧಿ ಸಹ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಇವುಗಳ ಆಧಾರದ ಮೇಲೆ ಸಂಪುಟ ರಚನೆ ಮಾಡಿರುವುದಾಗಿ ಮಾಹಿತಿ ನೀಡಿದರು.
ಇದೇ ವೇಳೆ ಬುಧವಾರ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಸ್ಪಷ್ಟಪಡಿಸಿದ ಸಿಎಂ ಕುಮಾರಸ್ವಾಮಿ ಯಾರಿಗೆ ಯಾವ ಖಾತೆ ನೀಡಲಾಗುತ್ತದೆ ಎಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ಸಮನ್ವಯ ಸಮಿತಿ ರಚನೆ: ಸರ್ಕಾರದ 5 ವರ್ಷಗಳ ಕಾಲ ಉತ್ತಮ ಆಡಳಿತ ನೀಡಲು ಸಮನ್ವಯ ರಚಿಸಿರುವುದಾಗಿ ವೇಣುಗೋಪಾಲ್ ತಿಳಿಸಿದರು. ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕಗೊಂಡಿದ್ದರೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಸಮಿತಿಯಲ್ಲಿ ಇರುತ್ತಾರೆ.
ಜಂಟಿ ಸುದ್ದಿಗೋಷ್ಠಿ ವೇಳೆ ಡಿಸಿಎಂ ಪರಮೇಶ್ವರ್, ಸಂಸದ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಉಪಸ್ಥಿತರಿದ್ದರು.
ಕಾಂಗ್ರೆಸ್ಸಿಗೆ ಯಾವ ಖಾತೆ?
ಗೃಹ ಇಲಾಖೆ, ಕಂದಾಯ, ಮುಜರಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ, ಕೃಷಿ, ಗಣಿ ಮತ್ತು ಭೂ ವಿಜ್ಞಾನ, ಬೃಹತ್ ಕೈಗಾರಿಕೆ, ಆರೋಗ್ಯ, ಆಹಾರ, ಆರಣ್ಯ ಇಲಾಖೆ, ನೀರಾವರಿ ಮತ್ತು ಜಲಸಂಪನ್ಮೂಲ, ಅಲ್ಪಸಂಖ್ಯಾತ, ಕಾನೂನು ಸಂಸದೀಯ, ಸಮಾಜ ಕಲ್ಯಾಣ, ಸಕ್ಕರೆ, ಐಟಿಬಿಟಿ, ಯುವಜನ ಮತ್ತು ಕ್ರೀಡಾ, ಕನ್ನಡ ಸಂಸ್ಕೃತಿ, ವೈದ್ಯಕೀಯ ಶಿಕ್ಷಣದಂತಹ ಪ್ರಮುಖ ಖಾತೆ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದೆ.
ಜೆಡಿಎಸ್ಗೆ ಯಾವ ಖಾತೆ?
ಹಣಕಾಸು, ಶಿಕ್ಷಣ, ಇಂಧನ, ಅಬಕಾರಿ, ಪಿಡಬ್ಲ್ಯೂಡಿ, ಸಹಕಾರ, ಪ್ರವಾಸೋದ್ಯಮ, ಶಿಕ್ಷಣ, ಸಾರಿಗೆ, ತೋಟಗಾರಿಕೆ, ಸಣ್ಣ ಕೈಗಾರಿಕೆ ಇಲಾಖೆ ಪ್ರಮುಖ ಖಾತೆಗಳು ಲಭಿಸಿದೆ.