ಜೈಪುರ್: ಗಲಭೆ, ಅಪರಾಧ, ಭ್ರಷ್ಟಾಚಾರ ಮತ್ತು ಪೇಪರ್ ಸೋರಿಕೆಯಲ್ಲಿ ರಾಜಸ್ಥಾನವನ್ನು (Rajasthan) ಕಾಂಗ್ರೆಸ್ (Congress) ನಂಬರ್ 1 ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ದಿಯೋಗರ್ನಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ಅವರು ಆರೋಪಗಳ ಮಳೆ ಸುರಿಸಿದ್ದಾರೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದಿನ ಬಿಜೆಪಿ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ನಿಲ್ಲಿಸಿದೆ. ಡಿ.3 ರಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ, ನಾವು ರಾಜ್ಯದ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಮತ್ತೆ ಆರಂಭಿಸುತ್ತೇವೆ. ಈ ಮೂಲಕ ರಾಜಸ್ಥಾನವನ್ನು ಅಭಿವೃದ್ಧಿಯ ದಿಕ್ಕಿಗೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರೆಬೆಲ್ ರಮೇಶ್ ಜಾರಕಿಹೊಳಿ ಭೇಟಿಯಾದ ವಿಜಯೇಂದ್ರ: ಗೋಕಾಕ್ ಸಾಹುಕಾರನ ಮನವೊಲಿಕೆ ಸಕ್ಸಸ್
ಈ ಬಾರಿ ರಾಜಸ್ಥಾನ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ. ಇಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರವಾಸೋದ್ಯಮ, ಹೂಡಿಕೆ, ಕೈಗಾರಿಕೆ ಮತ್ತು ಶಿಕ್ಷಣದಲ್ಲಿ ರಾಜ್ಯವನ್ನು ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದಿದ್ದಾರೆ.
200 ವಿಧಾನಸಭಾ ಸ್ಥಾನಗಳ ಪೈಕಿ 199 ಕ್ಷೇತ್ರಗಳಲ್ಲಿ ನ.25 ರಂದು ಮತದಾನ ನಡೆಯಲಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ. ಕಾರನ್ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ಅವರ ನಿಧನದಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.
2018 ರಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಎಸ್ಪಿ ಶಾಸಕರು ಮತ್ತು ಸ್ವತಂತ್ರರ ಬೆಂಬಲದೊಂದಿಗೆ ಗೆಹ್ಲೋಟ್ ಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದರು. ಇದನ್ನೂ ಓದಿ: ಜಾತಿ ಜನ ಗಣತಿ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಿ: ಸುನಿಲ್ ಕುಮಾರ್ ಆಗ್ರಹ