ಕೊಪ್ಪಳ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬುದ್ಧಿ ಹೇಳುವಷ್ಟು ನಾವು ದೊಡ್ಡವರಲ್ಲ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಕುಟುಕಿದ್ದಾರೆ.
ಪ್ರಧಾನಿ ಮೋದಿ ಆಗಮನದಿಂದ ಇಸ್ರೋ ಪ್ರಯತ್ನ ವಿಫಲವಾಯಿತು ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕರು, ಕುಮಾರಸ್ವಾಮಿ ಅವರು ಹಾಗೇ ಹೇಳಿಕೆ ನೀಡಿದ್ದು ತಪ್ಪು. ಅವರಿಗೆ ಬುದ್ಧಿ ಹೇಳುವಷ್ಟು ದೊಡ್ಡವರು ನಾವಲ್ಲ. ಇಸ್ರೋ ಪ್ರಯತ್ನ ಶ್ಲಾಘನೀಯ. ಕೊನೆ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ವಿಫಲ ಕಂಡಿದೆ ಅಷ್ಟೇ ಎಂದು ತಿಳಿಸಿದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನವು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಆಗಿದೆ. ವಿರೋಧ ಪಕ್ಷಗಳ ನಾಯಕರನ್ನು ಮಾತ್ರ ಬಂಧಿಸಲಾಗುತ್ತಿದೆ. ಬಿಜೆಪಿಯಲ್ಲಿ ಅನೇಕ ನಾಯಕರು ಅವ್ಯವಹಾರ ಎಸಗಿದವರು ಇದ್ದಾರೆ. ಆದರೆ ಅವರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಾನೂನು ಚೌಕಟ್ಟು ಮೀರಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪ್ರಮುಖ ಪಾತ್ರ ವಹಿಸಿದೆ ಎಂದು ಆರೋಪಿಸಿದರು.
ಡಿ.ಕೆ.ಶಿವಕುಮಾರ್ ಅವರ ಬಂಧನದ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂಬ ಆರೋಪ ಸುಳ್ಳು. ಇದು ಕೇವಲ ಉಹಾಪೋಹ. ಇಂತಹ ಹೇಳಿಕೆ ನೀಡುವ ಮೂಲಕ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮಲ್ಲಿರುವ ಸಣ್ಣತನವನ್ನು ವ್ಯಕ್ತಪಡಿಸಿದ್ದಾರೆ. ಅವರು ದ್ವೇಷದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ದೂರಿದರು.
ಎಚ್ಡಿಕೆ ಹೇಳಿದ್ದೇನು?:
ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕುಮಾರಸ್ವಾಮಿ ಅವರು, ಪ್ರಧಾನಿ ಮೋದಿ ಅವರು ಪ್ರಚಾರಕ್ಕಾಗಿ ಚಂದ್ರಯಾನ್-2ನ ವಿಕ್ರಂ ಲ್ಯಾಂಡರ್ ಚಂದ್ರಸ್ಪರ್ಶದ ವೇಳೆ ಇಸ್ರೋ ಕಚೇರಿಗೆ ಬಂದಿದ್ದರು. ಈ ಸಾಧನೆಯನ್ನು ತಾವೇ ಮಾಡಿದ್ದಾಗಿ ಬಿಂಬಿಸುವುದಕ್ಕೆ ಬಂದಿದ್ದರು. ಆದರೆ ಅಲ್ಲಿ ಅವರು ಕಾಲಿಟ್ಟಿದ್ದು ಇಸ್ರೋ ವಿಜ್ಞಾನಿಗಳಿಗೆ ಎಲ್ಲೋ ಒಂದು ಕಡೆ ಅಪಶಕುನ ಉಂಟಾಯಿತೋ ಏನೋ ಗೊತ್ತಿಲ್ಲ. ವಿಕ್ರಂ ಲ್ಯಾಂಡರ್ ಸರಿಯಾಗಿ ಲ್ಯಾಂಡ್ ಆಗಲಿಲ್ಲ ಎಂದು ಹೇಳಿದ್ದರು.
ರಾಜ್ಯಕ್ಕೆ ಪ್ರವಾಹ ಪರಿಹಾರ ಕಲ್ಪಿಸದ ಪ್ರಧಾನಿ ಮೋದಿ ರಷ್ಯಾಗೆ ಸಾಲ ಕೊಡುತ್ತಾರೆ. ಮೋದಿ ಅವರ ಮುಂದೆ ಮಾತನಾಡುವುದಕ್ಕೆ ರಾಜ್ಯ ಬಿಜೆಪಿ ನಾಯಕರು ಹೆದರುತ್ತಾರೆ ಎಂದು ಹೇಳುವಾಗ ಈ ರೀತಿ ವಿವಾದ ಮೇಲೆ ಎಳೆದುಕೊಂಡಿದ್ದರು.