ಮೈಸೂರು: ದುಷ್ಕರ್ಮಿ ನಡೆಸಿದ ಕೊಲೆ ಯತ್ನದಿಂದ ಜೀವನ್ಮರಣ ಹೋರಾಟದಲ್ಲಿದ್ದ ಶಾಸಕ ತನ್ವೀರ್ ಸೇಠ್ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಹೆಚ್ಚಿನ ಚಿಕಿತ್ಸೆ ಮತ್ತು ವಿಶ್ರಾಂತಿಗಾಗಿ ವಿದೇಶಕ್ಕೆ ತೆರಳಿದ್ದ ಅವರು ವಿಶ್ರಾಂತಿ ಮುಗಿಸಿ ಇಂದು ಭಾರತಕ್ಕೆ ವಾಪಸ್ಸಾಗಿದ್ದಾರೆ. ಇಷ್ಟು ದಿನ ಅವರು ದುಬೈನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಕಳೆದ ವರ್ಷದ ನವೆಂಬರ್ 18ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ಮೈಸೂರಿನ ಬನ್ನಿಮಂಟಪದಲ್ಲಿ ನೂರಾರು ಜನರ ಮುಂದೆಯೇ ಶಾಸಕರ ಮೇಲೆ ಕೊಲೆ ಯತ್ನ ನಡೆದಿತ್ತು.
ಘಟನೆಯಲ್ಲಿ ಕುತ್ತಿಗೆ ಭಾಗಕ್ಕೆ ಮಚ್ಚಿನ ಪೆಟ್ಟು ಬಿದ್ದು ತನ್ವೀರ್ ಸೇಠ್ ಜೀವನ್ಮರಣ ಹೋರಾಟ ಆರಂಭಿಸಿದ್ದರು. ಆಗ ಮೈಸೂರಿನಲ್ಲಿ ಚಿಕಿತ್ಸೆ ಪಡೆದಿದ್ದ ಶಾಸಕ ತನ್ವೀರ್ ಸೇಠ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಕಳುಹಿಸಲಾಗಿತ್ತು. ಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಿದೆ. ನಂತರ ದುಬೈನಲ್ಲೇ ಅವರು ವಿಶ್ರಾಂತಿ ಪಡೆಯುತ್ತಿದ್ದರು. ಇವತ್ತು ಭಾರತಕ್ಕೆ ವಾಪಾಸ್ ಬಂದಿರುವ ಸೇಠ್ ರಾತ್ರಿ ವೇಳೆಗೆ ಮೈಸೂರಿಗೆ ಆಗಮಿಸಲಿದ್ದಾರೆ.